ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ : ಸಚಿವ ಚಲುವರಾಯಸ್ವಾಮಿ

Update: 2024-06-26 12:21 GMT

ಬೆಳಗಾವಿ : ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು.

ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ಅವರು ಹೇಳಿದರು.

ಕೃಷಿ ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಿಸಿದ ಕೃಷಿ ಸಚಿವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು.

ಸ್ಥಳೀಯವಾಗಿ ಬೀಜೋತ್ಪಾದನೆ ಮಾಡಿ: ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸುವಂತೆ ಚಲುವರಾಯ ಸ್ವಾಮಿ ತಿಳಿಸಿದರು.

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಿ. ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಸಕಾಲದಲ್ಲಿ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಅವರು ಕಿವಿ ಮಾತು ಹೇಳಿದರು.

ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆ ಮಾಡಿ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ಚಲುವರಾಯಸ್ವಾಮಿ ನಿರ್ದೇಶನ ನೀಡದರು.

ರೈತರಿಗೆ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ. ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೊಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ ಎಂದು ಚಲುವರಾಯಸ್ವಾಮಿ ಸಲಹೆ ನೀಡಿದರು.

ಹೈಟೆಕ್ ಹಾರ್ವೆಸ್ಟ್ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ. ಸುಸ್ಥಿರ, ಸಮಗ್ರ ಕೃಷಿ ಬಗ್ಗೆ ತರಬೇತಿ, ಮಾರ್ಗದರ್ಶನ ನೀಡಿ, ಬಜೆಟ್ ನಲ್ಲಿ ಘೋಷಿಸಿರುವ ಎಲ್ಲ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಿ ಎಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಅಪರ ನಿರ್ದೇಶಕ ವೆಂಕಟರಮಣ ರೆಡ್ಡಿ ಮತ್ತಿತರರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News