ಬೀದರ್ | ಸಿಂಧನಕೇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

ಬೀದರ್ : ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಗಂಧಾ ಅವರನ್ನು ಅಮಾನತುಗೊಳಿಸಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಆದೇಶ ಹೊರಡಿಸಿದ್ದಾರೆ.
ಇತ್ತೀಚಿಗೆ ಸಿಂಧನಕೇರಾ ಗ್ರಾಮ ಪಂಚಾಯತ್ ಸಿಬ್ಬಂದಿ ಸುಭಾಷ್ ಅವರು ಮೃತಪಟ್ಟಿದ್ದರು. ಅವರಿಗೆ ಎರಡು ವರ್ಷದಿಂದ ವೇತನ ನೀಡದೆ ಸತಾಯಿಸಲಾಗಿತ್ತು. ಪಿಡಿಓ ಅವರು ಸದಾ ಬಯ್ಯುತ್ತಾ ಅವಮಾನ ಮಾಡುತ್ತಿದ್ದರು. ಅವರು ಫೋನ್ ಕರೆಯಲ್ಲಿ ಬಯ್ಯುವ ಆಡಿಯೋ ಕೂಡ ವೈರಲ್ ಆಗಿತ್ತು. ಪಿಡಿಓ ಅವರ ಕಿರಕುಳದಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಸುಭಾಷ್ ಅವರ ಸಾವಿಗೆ ಪಿಡಿಓ ಅವರೇ ಕಾರಣ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇದೀಗ ಪಿಡಿಓ ಸುಗಂಧಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.