ಬೀದರ್ | ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹುಮುಖ್ಯ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಕ್ರೀಡೆ ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಹಾಗೆಯೇ ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹು ಮುಖ್ಯ ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಮತ್ತು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚೀನ ಕಾಲದಿಂದಲೂ ಕ್ರೀಡೆಯು ಮಹತ್ವವಾದ ಸ್ಥಾನ ಪಡೆದಿದೆ. ರಾಮಾಯಣ, ಮಹಾಭಾರತದ ಕಾಲದಲ್ಲಿ ರಾಜರು ಕ್ರೀಡಾಕೂಟ ಏರ್ಪಡಿಸುತ್ತಿದ್ದರು. ಕ್ರೀಡೆ ಆಧುನಿಕ ಜಗತ್ತಿನಲ್ಲಿ ಅತ್ಯಂತ ಜನಪ್ರಿಯ ಮತ್ತು ಮಹತ್ವವನ್ನು ಪಡೆದಿರುವುದನ್ನು ನಾವು ಕಾಣಬಹುದು ಎಂದರು.
ರಾಜ್ಯ ಮಟ್ಟದ ಕ್ರೀಡಾಕೂಟ, ರಾಷ್ಟ್ರೀಯ ಕ್ರೀಡಾಕೂಟ, ಏಷ್ಯನ್ ಕ್ರೀಡಾಕೂಟ ಮತ್ತು ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿವೆ. ಅದರಲ್ಲಿ ಅನೇಕ ಯುವ ಪೀಳಿಗೆ ತಮ್ಮ ಪ್ರತಿಭೆಯ ಮೂಲಕ ಜಗತ್ತಿಗೆ ಗುರುತಿಸಿಕೊಳ್ಳುತ್ತಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಅನೇಕ ಪ್ರಶಸ್ತಿ ನೀಡಲಾಗುತ್ತಿದೆ. ಏಕಲವ್ಯ ಪ್ರಶಸ್ತಿ, ಮೇಜರ್ ಧ್ಯಾನಚಂದ್ ಖೇಲ್ ರತ್ನಾ ಪ್ರಶಸ್ತಿ, ಪದ್ಮ ಪ್ರಶಸ್ತಿ ಮತ್ತು ಸಚಿನ್ ತೆಂಡುಲ್ಕರ್ ಅವರಿಗೆ ಕ್ರೀಡಾ ವಿಭಾಗದಲ್ಲಿ ಭಾರತ ರತ್ನವನ್ನು ನೀಡಲಾಗಿದೆ. ಯುವ ಪೀಳಿಗೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಜೀವನವನ್ನು ಕಟ್ಟಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಿರಾದಾರ್ ಚಿದ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಮಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪ್ರಭುಲಿಂಗ್ ತುಗಾಂವೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ್ ಮಾಳಿಗೆ, ಕೋಶಾಧ್ಯಕ್ಷ ದೇವಪ್ಪ ಚಾಂಬೋಳೆ, ಗೌರವಾಧ್ಯಕ್ಷ ಸೂರ್ಯಕಾಂತ್ ಬಿರಾದಾರ್, ಕಾರ್ಯಾಧ್ಯಕ್ಷ ಶಿವರಾಜ್ ಕಮಲಾಪೂರೆ, ಹಿರಿಯ ಉಪಾಧ್ಯಕ್ಷ ಗೌತಮ್ ಚಿಂತಲಗೇರಾ, ಮಹ್ಮದ್ ಅಬ್ದುಲ್ ಸುತ್ತಾರ್ ಮತ್ತು ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ತಾಲ್ಲೂಕಾ ಅಧ್ಯಕ್ಷರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರು ಉಪಸ್ಥಿತರಿದ್ದರು.