ಮಂಗಳೂರು| ಸಂತ ಜೆರೋಸಾ ಶಾಲಾ ವಿವಾದ: ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

Update: 2024-02-15 03:48 GMT

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು.

ಫೆ.12ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಶಾಲೆಯ‌‌ ಮುಂದೆ ಜಮಾಯಿಸಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕನ್ನು ಶಾಲೆಯ ವಿರುದ್ಧ ಎತ್ತಿಕಟ್ಟುವಂತಹ ಪ್ರಯತ್ನ ನಡೆಸಿದ್ದರು ಎಂದು ಆಪಾದಿಸಲಾಗಿತ್ತು.

ಇದೀಗ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಕಾರ್ಪೊರೇಟರ್‌ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್, ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿ, ಶಾಲೆಯ ಮುಂದೆ ಅಕ್ರಮವಾಗಿ ಸೇರಿ ಜೈ ಶ್ರೀರಾಮ್ ಎಂದು ಘೋಷಣೆಗಳನ್ನು ಕೂಗಿ ಕ್ರಿಶ್ಚಿಯನ್ ಧರ್ಮದ ವಿರುದ್ಧ ಮಾತನಾಡಿ, ಶಾಲಾಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿ, ಹಿಂದೂ-ಕ್ರಿಶ್ಚಿಯನರ ಮಧ್ಯೆ ಗಲಭೆ ಸೃಷ್ಟಿಸಲು ಪ್ರಚೋದಿಸಿರುವುದಾಗಿ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.




Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News