ಹುಬ್ಬಳ್ಳಿ | ಯುವಕನ ಕೊಲೆ: ಕಾಲಿಗೆ ಗುಂಡಿಕ್ಕಿ ಇಬ್ಬರು ಆರೋಪಿಗಳ ಬಂಧನ

Update: 2024-10-12 08:33 GMT

ಹುಬ್ಬಳ್ಳಿ, ಅ.12: ಯುವಕನೋರ್ವನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಶನಿವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.

ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ (23) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ಶಿವರಾಜ್ ರನ್ನು ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆಗೈದು ಪರಾರಿಯಾಗಿದೆ.

ಗುಂಡಿಕ್ಕಿ ಆರೋಪಿಗಳ ಬಂಧನ

ಈ ಕೊಲೆ ಪ್ರಕರಣದ ಆರೋಪಿಗಳಾದ ಸುದೀಪ್ ರಾಯಾಪುರ, ಕಿರಣ್ ಜಟ್ಟಪ್ಪನವರ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇನ್ನುಳಿದ ಆರೋಪಿಗಳನ್ನು ಬಂಧಿಸುವುದಕ್ಕಾಗಿ ಅವರು ನೆಲೆಸಿದ್ದ ಸ್ಥಳಕ್ಕೆ ಸುದೀಪ್ ಮತ್ತು ಕಿರಣ್ ನನ್ನು ಇಂದು ಮುಂಜಾನೆ ಅಶೋಕ ನಗರ ಠಾಣೆಯ ಪೊಲೀಸರು ಕರೆದೊಯ್ದ ವೇಳೆ ಅವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರೆನ್ನಲಾಗಿದೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಕೂಡಾ ಗಾಯಗೊಂಡಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News