ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸು ಮಾಡಿದೆ: ಬಸವರಾಜ ಬೊಮ್ಮಾಯಿ

Update: 2025-02-16 12:10 IST
Photo of Basavaraja Bommai

ಬಸವರಾಜ ಬೊಮ್ಮಾಯಿ 

  • whatsapp icon

ಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು.

ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರಕಾರ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದರು.

ಮೈಸೂರಿನ ಉದಯಗಿರಿ ಗಲಾಟೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಾವಾಗ ಸರಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂದೆಗೆಯಿತೋ ಆಗ ಸರ್ಕಾರ ಯಾರ ಪರ ಇದೆ ಅನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನುವುದು ಗೊತ್ತಾಗುತ್ತದೆ. ಈ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ ಇಲ್ಲ. ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News