ಹಾಸನ | ಉಪಟಳ ನೀಡುತ್ತಿದ್ದ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಗೊಳಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಹಾಸನ : ಹಾಸನ ವಿಭಾಗ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಮೇಲೆ ದಾಳಿ ಮಾಡುತ್ತಾ ಬೆಳೆ ಮತ್ತು ಆಸ್ತಿ ನಾಶ ಮಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದು ಸ್ಥಳಾಂತರ ಮಾಡಿದ್ದಾರೆ.
ಬೇಲೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ತೋಟವೊಂದರಲ್ಲಿ ಸುಮಾರು 18ರಿಂದ 20 ವರ್ಷದ ಗಂಡು ಕಾಡಾನೆಯನ್ನು ಸೆರೆ ಹಿಡಿಯಲಾಯಿತು.
ಬೆಂಗಳೂರು ವನ್ಯಜೀವಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಕೆ ಮಾಲ್ಕಡೆ ಮತ್ತು ಬೆಂಗಳೂರು ಆನೆ ಯೋಜನೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮನೋಜ್ ಆರ್ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಹಾಸನ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಏಡುಕುಂಡಲ, ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಜಿಲ್ಲಾ ಆನೆ ಕಾರ್ಯಪಡೆ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಭಾಗವಹಿಸಿದರು. ಜೊತೆಗೆ, ನಾಗರಹೊಳೆ ಮತ್ತು ಬಂಡಿಪುರ ಪಶುವೈದ್ಯಾಧಿಕಾರಿಗಳು ಕಾರ್ಯಾಚರಣೆಯಲ್ಲಿ ನೆರವಾಗಿದರು.
ಕಾಡಾನೆಯನ್ನು ಸೆರೆ ಹಿಡಿಯಲು ಧನಂಜಯ, ಪ್ರಶಾಂತ, ಭೀಮ, ಕಂಜನ್, ಹರ್ಷ, ಏಕಲವ್ಯ, ಮತ್ತು ಮಹೇಂದ್ರ ಎಂಬ ಕುಮ್ಕಿ ಸಾಕಾನೆಗಳು ಸಹಾಯ ಮಾಡಿದ್ದು, ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ.