ಕಲಬುರಗಿ | ʼಜಿಲ್ಲಾ, ತಾಲ್ಲೂಕು ಮಟ್ಟದ ಅರಣ್ಯ ಅಧಿಕಾರಿಗಳ ಸಭೆ

ಕಲಬುರಗಿ : 2023 ರಲ್ಲಿ ತಿದ್ದುಪಡಿ ಮಾಡಲಾದ ಅರಣ್ಯ (ಸಂರಕ್ಷಣೆ) 1980 ಕಾಯ್ದೆಯು ಅರಣ್ಯಗಳು ಮತ್ತು ಸಂಬಂಧಿತ ವಿಷಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ, 2023ರ ತಿದ್ದುಪಡಿಯ ಕಾಯ್ದೆಯಂತೆ ಜಿಲ್ಲೆಯಲ್ಲಿ ಕಾಯ್ದಿಟ್ಟ ಅರಣ್ಯ ಪ್ರದೇಶವನ್ನು ಯಾವುದೇ ಇತರೆ ಕಾರ್ಯಗಳಿಗೆ ಬಳಸುವಂತಿಲ್ಲ, ಜಿಲ್ಲಾ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಾಲ-ಕಾಲಕ್ಕೆ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ʼಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅರಣ್ಯ ಅಧಿಕಾರಿಗಳ ಸಭೆʼಯಲ್ಲಿ ಮಾತನಾಡಿದ ಅವರು, ಈ ಕಾಯ್ದೆಯು ರಾಜ್ಯ ಸರ್ಕಾರಗಳು ಮತ್ತು ಇತರ ಪ್ರಾಧಿಕಾರಗಳು ಮೀಸಲು ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಪೂರ್ವಾನುಮತಿ ಇಲ್ಲದೆ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ಬಳಸುವುದಕ್ಕೆ ಆದೇಶಗಳನ್ನು ನೀಡುವುದನ್ನು ನಿರ್ಬಂಧಿಸುತ್ತದೆ ಎಂದರು.
ಈ ಕಾಯ್ದೆಯು "ಅರಣ್ಯೇತರ ಉದ್ದೇಶ" ವನ್ನು ಮರು ಅರಣ್ಯೀಕರಣವನ್ನು ಹೊರತುಪಡಿಸಿ ಯಾವುದೇ ಉದ್ದೇಶಕ್ಕಾಗಿ ಅರಣ್ಯ ಭೂಮಿ ಅಥವಾ ಅದರ ಭಾಗವನ್ನು ಒಡೆಯುವುದು ಅಥವಾ ತೆರವುಗೊಳಿಸುವುದು ಅಪರಾಧ ಆಗುತ್ತದೆ. ಈ ಕಾಯಿದೆಯ ನಿಬಂಧನೆಗಳ ಉಲ್ಲಂಘನೆಯು ಜೈಲು ಶಿಕ್ಷೆಗೆ ಗುರಿಪಡಿಸಬಹುದಾಗಿದೆ. ಕಾಯ್ದೆಯು ಅರಣ್ಯಗಳು ಮತ್ತು ಸಂಬಂಧಿತ ವಿಷಯಗಳ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶ ನೀಡಿದೆ ಎಂದರು.
ಈ ಕುರಿತಂತೆ ಇಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಕಾರ್ಯಗಾರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಗಳ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ಪ್ರಸ್ತುತ ಅರಣ್ಯ ಪ್ರದೇಶಗಳ ಮಾಹಿತಿಯನ್ನು ಡಿ.ಸಿ.ಎಫ್ ಸಮಿತ್ ಪಾಟೀಲ ಅವರು ನೀಡಿ, ಅರಣ್ಯ ಬೆಳೆಸುವಲ್ಲಿ ಇಲಾಖೆ ಕೈಗೊಂಡಿರುವ ಕ್ರಮಗಳು ಹಾಗೂ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಸಹಾಯಕ ಆಯುಕ್ತೆ ಸಾಹಿತ್ಯ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.