ಜು.5 ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2023-07-04 17:42 GMT

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.

ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಕೈಗೊಳ್ಳಬೇಕು. ದ.ಕ ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿರ್ದೇಶಿಸಿದ್ದಾರೆ.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824-244259ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ತಿಳಿಸಿದ್ದಾರೆ.



 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News