ಪಿಎಸ್ಸೈ ಪರಶುರಾಮ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

Update: 2024-08-07 13:32 GMT

ಕೊಪ್ಪಳ: ಪಿಎಸ್ಸೈ ಪರಶುರಾಮ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡದಲ್ಲದೆ, ಕುಟುಂಬಸ್ಥರಿಗೆ ಸ್ವಾಂತನ ಹೇಳಿದರಲ್ಲದೇ, ಶೀಘ್ರದಲ್ಲಿಯೇ 50 ಲಕ್ಷ ರೂ.ಪರಿಹಾರ ಒದಗಿಸಲು ಸರಕಾರ ಮುಂದಾಗಿದೆ ಎಂದು ಹೇಳಿದರು.

ಬುಧವಾರ ಕಾರಟಗಿಯ ಸೋಮನಾಳ ಗ್ರಾಮದಲ್ಲಿರುವ ನಿವಾಸದಲ್ಲಿ ಪಿಎಸ್ಸೈ ಪರಶುರಾಮ ಅವರ ಕುಟುಂಬದವರೊಂದಿಗೆ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗೆ ನಿರೀಕ್ಷೆ ಮಾಡಲಾಗುತ್ತಿದೆ ಎಂದರು.

ಎಫ್‍ಎಸ್‍ಎಲ್‍ನವರು ಪರಿಶೀಲನೆ ನಡೆಸಿ, ಮಾದರಿ ಸಂಗ್ರಹಿಸಿದ್ದಾರೆ. ಇಲಾಖೆಯ ಪ್ರಾಮಾಣಿಕ ಅಧಿಕಾರಿಯನ್ನು ಕಳೆದುಕೊಂಡಿದ್ದಕ್ಕೆ ನೋವಾಗುತ್ತಿದೆ.ಅಲ್ಲದೆ, ಪರಶುರಾಮ ಅವರ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನಮ್ಮ ಧರ್ಮ, ಕರ್ತವ್ಯ. ಪರಶುರಾಮ ತನ್ನ ಕುಟುಂಬದವರಿಗೆ ಎಲ್ಲವೂ ಆಗಿದ್ದರು ಎಂದು ಹೇಳಿದರು.

ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಅವರ ಪತ್ನಿ ಬಿಇ ವ್ಯಾಸಂಗ ಮಾಡಿದ್ದು, ಇಲಾಖೆಯಲ್ಲಿ ಸೂಕ್ತವಾದ ಉದ್ಯೋಗವನ್ನು ನೀಡುತ್ತೇವೆ. ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಥವಾ ಜೆಸ್ಕಾಂನಲ್ಲಿ ವ್ಯಾಸಂಗಕ್ಕೆ ಸೂಕ್ತವಾದ ಉದ್ಯೋಗ ಕಲ್ಪಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಬೇರೆ ಇಲಾಖೆಯಲ್ಲಿ ಉದ್ಯೋಗ ಕೋರಿರುವುದರಿಂದ ಮುಖ್ಯಮಂತ್ರಿಯವರು ನಿರ್ಧಾರ ತೆಗೆದುಕೊಳ್ಳಬೇಕು. ಈ ವಿಚಾರವನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಅಲ್ಲಿನ ಶಾಸಕ ಮತ್ತು ಪುತ್ರ ಪರಶುರಾಮ ಅವರ ಬಳಿ ಹಣಕ್ಕೆ ಒತ್ತಾಯಿಸಿದ್ದರು ಎಂದು ಕುಟುಂಬಸ್ಥರು ಆಪಾದನೆ ಮಾಡಿದ್ದಾರೆ. ಈ ಕುರಿತು ಘಟನೆಯಾದ ದಿನವೇ ಪ್ರಕರಣ ದಾಖಲಿಸಿ, ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆ ವೇಳೆ ಸ್ಥಳೀಯ ಪೊಲೀಸರ ಮೇಲೆ ಒತ್ತಡ ಬರಬಾರದು ಎಂಬ ಉದ್ದೇಶದಿಂದ. ನ್ಯಾಯ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಬಾರದು ಎಂಬ ನಿಟ್ಟಿನಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News