ಮುಡಾ ಪ್ರಕರಣ | ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುವುದಿಲ್ಲ : ಎಚ್‌.ಡಿ.ಕುಮಾರಸ್ವಾಮಿ

Update: 2024-09-24 13:33 GMT

ಎಚ್.ಡಿ.ಕುಮಾರಸ್ವಾಮಿ

ಮಂಡ್ಯ/ನಾಗಮಂಗಲ : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ನಾನು ಹಿಂದೆಯೂ ಒತ್ತಾಯಿಸಿಲ್ಲ, ಈಗಲೂ ಒತ್ತಾಯಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾನೂನು ಕ್ರಮಕ್ಕೆ ರಾಜ್ಯಪಾಲರು ನೀಡಿದ್ದ ಅನುಮತಿಯ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳವಾರ ನಾಗಮಂಗಲದ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆದ ಜಾನಪದ ಮೇಳ ಹಾಗೂ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ವೇಳೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾನು ಪಾದಯಾತ್ರೆ ಮಾಡಿದ್ದು ಜನರನ್ನು ಎಚ್ಚರಿಸಲು, ಸಿದ್ದರಾಮಯ್ಯ ಅವರ ರಾಜೀನಾಮೆಗೆ ಅಲ್ಲ" ಎಂದು ಸ್ಪಷ್ಟಪಡಿಸಿದರು.

"ನನ್ನ ವಿರುದ್ಧವೂ ಅನೇಕ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ. ಅವುಗಳ ವಿಚಾರಣೆ ಮುಗಿಯಲಿ. ಅಲ್ಲಿವರೆಗೆ ನಾನು ಏನು ಪ್ರತಿಕ್ರಿಯೆ ಕೊಡುವುದಿಲ್ಲ. ನಾನು ಕೇಂದ್ರ ಸಚಿವನಾಗಿರುವುದನ್ನು ಸಹಿಸದೆ ಕೆಲವು ಸಚಿವರು ಸಲ್ಲದ ಆರೋಪ ಮಾಡುತ್ತಿದ್ದಾರೆ. ಅಂತಿಮ ತೀರ್ಮಾನ ಜನರು ಮತ್ತು ನ್ಯಾಯಾಲಯದ ಕೈಯಲ್ಲಿದೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News