ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ದಸರಾ ಆಚರಣೆ : ಸಚಿವ ಮಹದೇವಪ್ಪ

Update: 2024-08-16 16:59 GMT

ಮೈಸೂರು : ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೊನ್ನೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅ.3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ರೂ.ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ್‌ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆಯ ಮೇರಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ದಸರಾ ಆಚರಣೆಗೆ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಗಜ ಪಯಣವನ್ನು ಆ.21 ರಂದು ನಿಗದಿ ಮಾಡಲಾಗಿದೆ. ಕರ್ನಾಟಕ ಸಂಭ್ರಮ 50ನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ  ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News