ಮೈಸೂರು | ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಲು ವಿಳಂಬ; ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಯತ್ನ, ದಸಂಸ ಮುಖಂಡರ ಬಂಧನ
ಮೈಸೂರು : ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ದಲಿತ ಸಂಘರ್ಷ ಸಮಿತಿ ಮುಖಂಡರನ್ನು ಅರ್ಧದಲ್ಲಿಯೇ ತಡೆದು ಪೊಲೀಸರು ಬಂಧಿಸಿದ ಘಟನೆ ನಡೆಯಿತು.
ನಗರದ ಹೃದಯಭಾಗದಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಆರಂಭವಾಗಿ 13 ವರ್ಷಗಳೇ ಕಳೆದರೂ ಅಪೂರ್ಣಗೊಂಡು ಅರ್ಧಕ್ಕೆ ನಿಂತು ಹೋಗಿದೆ. ಕಾಮಗಾರಿ ಆರಂಭಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಸಂಸ ಮುಖಂಡರು ಸಚಿವ ಮಹದೇವಪ್ಪ ಅವರ ನಿವಾಸ ಮುತ್ತಿಗೆ ಹಾಕಲು ಸೋಮವಾರ ಯತ್ನಿಸಿದರು.
ದಸಂಸ ಮುಖಂಡರು ಸಚಿವ ಮಹದೇವಪ್ಪ ಅವರ ಮನೆಗೆ ಮುತ್ತಿಗೆ ಹಾಕುವ ವಿಷಯ ತಿಳಿದ ಪೊಲೀಸರು, ಅವರ ಮನಗೆ ಆಗಮಿಸುವ ರಸ್ತೆಗಳಲ್ಲಿ ಅಡ್ಡಲಾಗಿ ಬ್ಯಾರಿಕೇಡ್ ಗಳನ್ನು ಹಾಕಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರನ್ನು ತಡೆದು ಬಂಧಿಸಿದರು.
ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್ ವ್ಯಾನ್ ನಲ್ಲಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.
ಪೊಲೀಸರ ವರ್ತನೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಪೊಲೀಸರು, ಸಚಿವ ಮಹದೇವಪ್ಪ ಮತ್ತು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, ಅಂಬೇಡ್ಕರ್ ಭವನ ಕಾಮಗಾರಿ ಆರಂಭವಾಗಿ 13 ವರ್ಷ ಕಳೆದಿವೆ. ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳು ಇತ್ತ ಗಮನ ಹರಿಸಲಿಲ್ಲ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ದಲಿತ ಸಮುದಾಯ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಂಬೇಡ್ಕರ್ ಭವನ ಪೂರ್ಣಗೊಳಿಸುವಂತೆ ಒತ್ತಾಯಿಸಿಕೊಂಡು ಬರಲಾಗಿದೆ. ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕೂಡ ಅದರ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಾ ಬಂದಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಹಲವು ಬಾರಿ ತಂದರೂ ಇದರ ಬಗ್ಗೆ ಗಮನ ಹರಿಸದೆ ದಲಿತರನ್ನೆ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ದಸಂಸ ಮುಖಂಡರುಗಳಾದ ಶಂಭುಲಿಂಗಸ್ವಾಮಿ, ಶಿವಬುದ್ಧಿ, ಚೋರನಹಳ್ಳಿ ಶಿವಣ್ಣ, ಎಡದೊರೆ ಮಹದೇವಯ್ಯ, ಕಲ್ಲಹಳ್ಳಿ ಕುಮಾರ್, ಆಲಗೋಡು ಶಿವಕುಮಾರ್, ಕುಕ್ಕೂರು ರಾಜು, ಸಿದ್ಧರಾಜು ಹೊಮ್ಮರಗಳ್ಳಿ, ಮುತ್ತು, ಮಹೇಶ್, ಅಶೋಕಪುರಂ ಅಣ್ಣಯ್ಯ, ಸೇರಿದಂತೆ ಹಲವರು ಭಾಗವಹಿಸಿದ್ದರು.
"ಮಾ.27 ರಂದು ಕ್ಯಾಬಿನೆಟ್ ನಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ಆರಂಭ ಸಂಬಂಧ ಹೆಚ್ಚುವರಿ 23 ಕೋಟಿ ರೂ. ಹಣ ಬಿಡುಗಡೆ ಮಾಡಲಾಗುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶೀಘ್ರದಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ಆರಂಭಿಸದಿದ್ದರೆ ಎಪ್ರಿಲ್ 14 ರ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಅವಕಾಶ ನೀಡುವುದಿಲ. ಅವರ ದಲಿತ ವಿರೋಧಿ ನೀತಿಯನ್ನು ಕರಪತ್ರ ಮಾಡಿ ಎಲ್ಲಾ ಕಡೆಗಳಲ್ಲಿ ಹಂಚಲಾಗುವುದು"
-ಬೆಟ್ಟಯ್ಯ ಕೋಟೆ, ದಸಂಸ ಜಿಲ್ಲಾ ಸಂಚಾಲಕ.