ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್ ಜಾರಕಿಹೊಳಿ

Update: 2024-10-08 08:24 GMT

ಮೈಸೂರು : "ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಎಂ ಆಗಲು ಯಾರಿಗೆ ತಾನೆ ಇಷ್ಟ ಇರಲ್ಲ. ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆಯೂ ಇಲ್ಲ. ಇವತ್ತು ಮಹದೇವಪ್ಪ ಅವರನ್ನು ಭೇಟಿ ಮಾಡುತ್ತೇನೆ. ಮೈಸೂರು ಭಾಗದ ಶಾಸಕರನ್ನು ಭೇಟಿ ಮಾಡುತ್ತೇನೆ. ನಿನ್ನೆಯಿಂದಲೂ ಹಲವರು ನನ್ನನ್ನು ಭೇಟಿ ಮಾಡಿದ್ದಾರೆ. ನಾನು ಸಚಿವನಾಗಿರುವ ಕಾರಣಕ್ಕೆ ನನ್ನನು ಭೇಟಿ ಆಗುತ್ತಾರೆ" ಎಂದರು.

" ಸಿದ್ದರಾಮಯ್ಯನವರು 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ. ಅದನ್ನು ನೀವು ಹೈಕಮಾಂಡ್ ಬಳಿ ಕೇಳಬೇಕು. ಆದರೆ ಈಗ ಸಿದ್ದರಾಮಯ್ಯನವರೇ ನಮ್ಮ ಸಿಎಂ. ಅದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಪಕ್ಷಗಳು, ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ. ಅವರವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸಾಮಾನ್ಯ. ಅದನ್ನೇ ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News