2 ಸಾವಿರ ಲೈನ್‍ಮೆನ್‍ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ : ಸಚಿವ ಕೆ.ಜೆ.ಜಾರ್ಜ್

Update: 2024-07-10 13:30 GMT

ರಾಯಚೂರು : ಇಂಧನ ಇಲಾಖೆಗೆ ಸದ್ಯದಲ್ಲೇ 2 ಸಾವಿರ ಲೈನ್‍ಮೆನ್‍ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಬುಧವಾರ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಲೈನ್‍ಮೆನ್‍ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ" ಎಂದರು.

ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದುದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‍ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಾರ್ಜ್ ತಿಳಿಸಿದರು.

ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಅವರು ಹೇಳಿದರು.

ಈಗಾಗಲೇ 1 ಸಾವಿರ ಸಹಾಯಕ ಇಂಜಿನಿಯರ್ ಗಳ (ಎಇ), ಕಿರಿಯ ಇಂಜಿನಿಯರ್ ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ ಎಂದು ಜಾರ್ಜ್ ತಿಳಿಸಿದರು.

ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಿಗಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ ಎಂದು ಜಾರ್ಜ್ ನುಡಿದರು.

ದಾಖಲೆ ಉತ್ಪಾದನೆ: ಈ ಬಾರಿ ಆರ್‌ ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮ ಪ್ರಶಂಸನೀಯ. ಅವರೆಲ್ಲನ್ನೂ ಅಭಿನಂದಿಸಲೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ಅವರು ಹೇಳಿದರು.

ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2 ಸಾವಿರ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಎಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು ದಾಖಲೆಯಾಗಿದೆ ಎಂದು ಜಾರ್ಜ್ ಹೇಳಿದರು.

ಅದರಲ್ಲೂ ಆರ್‌ ಟಿಪಿಎಸ್ ವಿದ್ಯುತ್ ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್ ಸಾಮರ್ಥ್ಯದ 3ನೇ ವಿದ್ಯುತ್ ಘಟಕದಲ್ಲಿ ಎ.4ರಂದು 216 ಮೆಗಾವ್ಯಾಟ್ ಉತ್ಪಾದನೆ ಮಾಡಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ ಟಿಪಿಎಸ್‍ನ ಏಳು ವಿದ್ಯುತ್ ಘಟಕಗಳು ಸೇರಿ ಶೇ.85ರಷ್ಟು ವಿದ್ಯುತ್ ಉತ್ಪಾದಿಸಿವೆ ಎಂದು ಅವರು ಮಾಹಿತಿ ನೀಡಿದರು.

ಅದೇ ರೀತಿ, ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್) 2023-24 ಹಣಕಾಸು ವರ್ಷದಲ್ಲಿ 6229.250 ಮಿಲಿಯನ್ ಯೂನಿಟ್ ಉತ್ಪಾದಿಸಿದೆ. ಇದು ಈವರೆಗಿನ ಗರಿಷ್ಠ ಉತ್ಪಾದನೆ. ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ 6 ಸಾವಿರ ಮಿಲಿಯನ್ ಯೂನಿಟ್ ಗುರಿಯನ್ನು ವೈಟಿಪಿಎಸ್ ಮೀರಿದೆ. ಇನ್ನು ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರ 8208.476 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಿದೆ. ಸ್ಥಾವರ ಕಾರ್ಯಾರಂಭ ಮಾಡಿದ ನಂತರ ಸಾಧಿಸಿದ ಅತ್ಯಧಿಕ ಉತ್ಪಾದನೆಯ ದಾಖಲೆ ಇದಾಗಿದೆ ಎಂದು ಜಾರ್ಜ್ ಹೇಳಿದರು.

ಆರ್ ಟಿಪಿಎಸ್, ಒಂದನೇ ಘಟಕ ತೀರಾ ಹಳೆಯದು ಎಂಬ ಕಾರಣಕ್ಕೆ ಮುಚ್ಚುವುದಿಲ್ಲ. ನಾವು ಈಗಾಗಲೇ ಕೆಪಿಸಿ ಬೋರ್ಡ್ ಮೀಟಿಂಗ್‍ನಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ. ಅದನ್ನು ಸರಿ ಮಾಡಲು ಅಗತ್ಯ ಹಣ ಬಿಡುಗಡೆಗೂ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಕಲ್ಲಿದ್ದಲು ಕೊರತೆ ಇಲ್ಲ: ನಮ್ಮ ಸರಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಿಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್‍ನಿಂದಲೂ ಕಲ್ಲಿದ್ದಲು ಬರುತ್ತಿದೆ. ಪ್ರಸಕ್ತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಸಚಿವರು ವಿವರ ನೀಡಿದರು.

ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಹಂಪಯ್ಯ ನಾಯಕ್, ಮಾನಪ್ಪ ವಜ್ಜಲ್, ಬಸವರಾಜ್ ತುರುವಿನಹಾಳ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News