ರಾಯಚೂರು | ಬೇಸಿಗೆ ಹಿನ್ನೆಲೆ ಹೆಚ್ಚಿದ ತಾಪಮಾನ : ಜಿಲ್ಲಾಡಳಿತದಿಂದ ಕಾರ್ಮಿಕರಿಗೆ ಸಲಹೆ

ರಾಯಚೂರು : ಬೇಸಿಗೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ ನಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದ್ದು, ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣದಾರ ಮತ್ತು ಇತರೆ ಉದ್ದಿಮೆಗಳ ಮಾಲಕರು ಮತ್ತು ಕಾರ್ಮಿಕರು ಕೆಲವು ಸಲಹೆ-ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ) ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹೊರಗಡೆ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ, ಬೀದಿ ಬದಿ ವ್ಯಾಪಾರಸ್ಥರ, ವಾಹನ ಚಾಲಕರ ಮತ್ತು ಇತರೆ ವರ್ಗದ ಎಲ್ಲಾ ಕೆಲಸಗಾರರ ಆರೋಗ್ಯವನ್ನು ಕಾಪಾಡುವ ಮತ್ತು ಸುರಕ್ಷತೆಯನ್ನು ಒದಗಿಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣದಾರ ಮತ್ತು ಇತರೆ ಉದ್ದಿಮೆಗಳ ಮಾಲಕರಿಗೆ ಮತ್ತು ಕಾರ್ಮಿಕರಿಗೆ ಕೆಲವು ಸಲಹೆ-ಸೂಚನೆಗಳನ್ನು ನೀಡಿ ಮುಂದಿನ ದಿನಗಳಲ್ಲಿ ತಮ್ಮ ಸುರಕ್ಷತೆಯನ್ನು ಕಾಪಾಡುವ ಹಿನ್ನಲೆಯಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.
ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ತಂಪಾದ ಕುಡಿಯುವ ನೀರು ಮತ್ತು ಎಲೆಕ್ಕೋಲೈಟ್ ಪೂರಕಗಳ ವ್ಯವಸ್ಥೆಯನ್ನು ಮಾಲಕರು ಮಾಡಬೇಕು. ಡಿ-ಹೈಡೇಟೆಡ್ ಆಗದಿರಲು ಕಾರ್ಮಿಕರು ಮತ್ತು ಎಲ್ಲರೂ ಪ್ರತಿ 20 ನಿಮಿಷಗಳಿಗೊಮ್ಮೆ ಅಥವಾ ಹೆಚ್ಚು ಭಾರಿ ನೀರನ್ನು ಕುಡಿಯುವಂತೆ ಹಾಗೂ ಕೆಲಸದ ಮಧ್ಯೆದಲ್ಲಿ ವಿಶ್ರಾಂತಿ ಪಡೆದು ಕೆಲಸ ಮಾಡಲು ಗಮನ ವಹಿಸಬೇಕು. ಶ್ರಮದಾಯಕ ಮತ್ತು ಹೊರಾಂಗಣ ಚಟುವಟಿಕೆಗಳನ್ನು ತಾಪಮಾನ ಕಡಿಮೆ ಇರುವ ಸಮಯದಲ್ಲಿ, ಅಂದರೆ ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವುದು., ಆದಷ್ಟು ಕಾರ್ಮಿಕರು ಬೆಳಿಗ್ಗೆ 11 ರಿಂದ ಸಂಜೆ 4ರವರೆಗೆ ನೇರವಾಗಿ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಮಾಲಕರು ಎಚ್ಚರ ವಹಿಸುವುದು. ಸಾಧ್ಯವಾದಲ್ಲಿ ಬೃಹತ್ ಕಟ್ಟಡ ಮತ್ತು ಇತರೆ ನಿರ್ಮಾಣದಾರರು ಕೆಲಸದ ಪಾಳಿಯನ್ನು ರಾತ್ರಿ ವೇಳೆ ಮಾಡಬಹುದಾಗಿರುತ್ತದೆ.
ಹೆಚ್ಚಿನ ಬಿಸಿಲಿನ ತಾಪಮಾನವಿರುವ ಸಮಯದಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಕೂಲವಾಗುವಂತೆ ನೆರಳು ಇರುವ ಪ್ರದೇಶವನ್ನು ಮಾಲಕರು ಒದಗಿಸುವುದು ಅಥವಾ ನೌಕರರು ಮತ್ತು ಕಾರ್ಮಿಕರಿಗೆ ಕೆಲಸದ ಸಮಯವನ್ನು ಕಾರ್ಮಿಕರೊಂದಿಗೆ ಸಮಾಲೋಚಿಸಿ ಮರು-ನಿಗದಿಪಡಿಸಿಕೊಳ್ಳುವುದು, ಕೆಲಸದ ಸ್ಥಳದ ಬಳಿ ವಿಶ್ರಾಂತಿ ಪಡೆಯಲು ಗಾಳಿ ಬೆಳಕು ಮತ್ತು ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ತಾತ್ಕಾಲಿಕ ಶೆಡ್ಗಳನ್ನು ಮಾಲಕರು ನಿರ್ಮಿಸತಕ್ಕದ್ದು, ಕಾರ್ಮಿಕರಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹೊರಡಿಸಿದ ಆರೋಗ್ಯ ಸಲಹೆಯನ್ನು ಅನುಸರಿಸಿ, ಕಾರ್ಮಿಕರ ನಿಯಮಿತ ಆರೋಗ್ಯ ತಪಾಸಣೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವುದು.
ಕೆಲಸದ ಸಮಯದಲ್ಲಿ ಕಾರ್ಮಿಕರು ಆದಷ್ಟು ಹತ್ತಿಯ ಮತ್ತು ಶ್ವೇತ ವರ್ಣದ ತುಂಬು ತೋಳಿನ ಅಂಗಿ/ಬಟ್ಟೆ ಮತ್ತು ಟೋಪಿ, ಕೂಲಿಂಗ್ ಗ್ಲಾಸ್ ಧರಿಸುವುದು, ಒಳಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಂಬಂಧಿಸಿದಂತೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಮಾಲಕರು ತೆಗೆದುಕೊಳ್ಳುವುದು. ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸುವುದು, ಹೀಟ್ ಸ್ಟೋಕ್ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.