ರಾಯಚೂರು | ಸಾರಿಗೆ ಬಸ್-ಶಾಲಾ ಬಸ್ ನಡುವೆ ಭೀಕರ ಅಪಘಾತ ; ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಣೆ

Update: 2024-09-05 11:33 GMT

ಜಿಲ್ಲಾಧಿಕಾರಿ ಕೆ.ನಿತೀಶ್/ ಬಸ್‌ಗಳ ನಡುವೆ ಅಪಘಾತ

ರಾಯಚೂರು: ಸಾರಿಗೆ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಗುರುವಾರ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರ ಬಾಲಕರ ಕುಟುಂಬಕ್ಕೆ ಸಾರಿಗೆ ಇಲಾಖೆಯಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ನಿತೀಶ್ ಹೇಳಿದರು.

ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಅಪಘಾತದಲ್ಲಿ ಮೃತಪಟ್ಟಿರುವ ಮಕ್ಕಳ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಿಗೆ 3 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಭೀಕರ ಅಪಘಾತದಿಂದ ಇಬ್ಬರು ವಿದ್ಯಾರ್ಥಿಗಳ ಮೃತಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. 40 ವಿದ್ಯಾರ್ಥಿಗಳ ಪೈಕಿ 17 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ . ರಾಯಚೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ಹೆಚ್ಚಿನ ಚಿಕಿತ್ಸೆ ಬೇಕಿದ್ದಲ್ಲಿ ಬೇರಡೆ ರವಾನಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಕುಟುಂಬಗಳಿಗೆ ಪರಿಹಾರ ನೀಡಲು ರಾಜ್ಯ ಸರಕಾರ ಆದೇಶ ಮಾಡಿದೆ. ಮುಂದೆ ಇಂತಹ ಅನಾಹುತಗಳು ಆಗದಂತೆ ತಡೆಯಲು ಅಗತ್ಯ ಮುನ್ನಚ್ಚೆರಿಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು .

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News