ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ಡಿಸಿಎಂ : ಡಿ.ಕೆ.ಶಿವಕುಮಾರ್

Update: 2024-07-01 17:24 GMT

ಬೆಂಗಳೂರು : ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರದ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ನಡೆದ ‘ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ’ ಎಂದು ನುಡಿದರು.

ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ ಎಂದು ಅವರು ಹೇಳಿದರು.

ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ .ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ ನಿಮಗೆ ಕೋಟಿ ನಮಸ್ಕಾರಗಳು ಎಂದು ಶಿವಕುಮಾರ್ ತಿಳಿಸಿದರು.

ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ: ಐದು ಜಿಲ್ಲಾ ಪಂಚಾಯತಿಗಳಲ್ಲಿ 4,419 ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಸುಮಾರು 1,996 ಜನ ಮನೆಯಿಲ್ಲ ಎಂದು ಅರ್ಜಿ ಸಲ್ಲಿಸಿದ್ದಾರೆ. 1,010 ಮಂದಿ ನಿವೇಶನವಿಲ್ಲ ಎಂದು ಅರ್ಜಿ ಸಲ್ಲಿಸಿದ್ದಾರೆ. ಸರಕಾರಿ ಅಥವಾ ಖಾಸಗಿ ಜಮೀನು ಹುಡುಕಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಕಾಡಾನೆಗಳ ಹಾವಳಿ ತಪ್ಪಿಸಲು ಬನ್ನೇರುಘಟ್ಟದಿಂದ ಇಲ್ಲಿಯ ವರೆಗೆ 180 ಕಿಮೀ ಉದ್ದ ಬ್ಯಾರಿಕೆಡ್ ಅನ್ನು ಸುರೇಶ್ ಶ್ರಮದಿಂದ ಹಾಕಲಾಗುತ್ತಿದೆ. ಟಾಸ್ಕ್ ಫೋರ್ಸ್ ಸಿದ್ಧವಾಗಿದೆ ಎಂದು ತಿಳಿಸಿದರು.

ಗ್ಯಾರಂಟಿಗಳಿಂದ ಅತ್ತೆ-ಸೊಸೆ ಜಗಳ ಆಗುತ್ತದೆ ಎಂದು ಸುಳ್ಳು ಹೇಳಿದರು. ಆದರೆ ಗ್ಯಾರಂಟಿಗಳಿಂದ ನಿಮ್ಮ ಬದುಕು ಬದಲಾವಣೆಯಾಗಿದೆ. ಒಂದೇ ಒಂದು ರೂ.ಲಂಚ ಕೊಡದೆ ಐದು ಭಾಗ್ಯಗಳನ್ನು ಪಡೆಯುತ್ತಾ ಇದ್ದೀರಿ. ಅದೇ ರೀತಿ ತಾಲೂಕು ಕಚೇರಿಯಲ್ಲಿ ಒಂದು ರೂ..ಲಂಚ ಕೊಡದೆ ಸರ್ವೇ, ಪಹಣಿ, ಪೋಡಿ ಕೆಲಸ ಮಾಡಿಕೊಡಿಸುವ ಜವಾಬ್ದಾರಿ ನನ್ನದು’ ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News