ಸಿಎಂ ಜೊತೆ ಚರ್ಚಿಸಿ ಶರಾವತಿ ಸಂತ್ರಸ್ತರ ಪುನರ್ವಸತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

Update: 2024-03-04 18:18 GMT

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನು ಡಿ-ರಿಸರ್ವ್ ಮಾಡುವ ಬಗ್ಗೆ ಈಗಾಗಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಐಎ ಸಲ್ಲಿಸಲು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ಫೆ.22ರಂದು ದಾಖಲೆಗಳೊಂದಿಗೆ ಅಫಿಡವಿಟ್‌ನ್ನು ವಕೀಲರಿಗೆ ತಲುಪಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸಂತ್ರಸ್ತರ ಪುನರ್ವಸತಿ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮಲೆನಾಡು ರೈತರ ಹೋರಾಟ ಸಮಿತಿ ಸದಸ್ಯರಾದ ಶ್ರೀಕರ್ ಮತ್ತು ಇತರರು, ಶರಾವತಿ ಸಂತ್ರಸ್ತರ ಪುನರ್ವಸತಿ ಕುರಿತು ಸರಕಾರದ ಮಟ್ಟದಲ್ಲಿ ಒಂದು ಟಾಸ್ಕ್ ಫೋರ್ಸ್ ಸಮಿತಿ ರಚಿಸಿ, ಸಮಗ್ರವಾಗಿ ಪರಿಶೀಲನೆ ನಡೆಸಿ, ಪ್ರಸಕ್ತ ಇರುವ ಮಾರ್ಗಸೂಚಿಯನ್ನು ಪರಿಷ್ಕರಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, 27-4-1978 ರ ಪೂರ್ವದ ಮೂರು ಎಕರೆವರೆಗಿನ ಅರಣ್ಯ ಭೂಮಿ ಒತ್ತುವರಿ ಸಕ್ರಮಗೊಳಿಸಿ ಪಟ್ಟಾ ವಿತರಿಸುವ ಕುರಿತು ಜಿಲ್ಲಾ ವ್ಯಾಪ್ತಿಯಲ್ಲಿ 1,419 ಕುಟುಂಬಗಳಿಗೆ 2060.30 ಎಕರೆ ಅರಣ್ಯ ಒತ್ತುವರಿ ಪ್ರದೇಶವನ್ನು ಸಕ್ರಮಗೊಳಿಸಲು ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದಾರೆ. ಈ ಪ್ರದೇಶವು ವಿವಿಧ ಅರಣ್ಯಗಳಲ್ಲಿದ್ದು, ಪ್ರತಿ ಅರಣ್ಯಕ್ಕೆ ಸಂಬಂಧಿಸಿದಂತೆ 65 ಡಿ ರಿಸರ್ವೇಷನ್ ಪ್ರಸ್ತಾವ ಸಲ್ಲಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಒತ್ತುವರಿ ಸಕ್ರಮಾತಿ ಆದೇಶಗಳಲ್ಲಿನ ಷರತ್ತುಗಳಂತೆ ಸಿದ್ಧಪಡಿಸಬೇಕಿದೆ. ಈ ಷರತ್ತುಗಳಂತೆ ಪ್ರಸ್ತಾವಗಳನ್ನು ಸಿದ್ಧಪಡಿಸಲು ಕ್ಷೇತ್ರದಲ್ಲಿ ಹಲವಾರು ಅಡಚಣೆಗಳಿದ್ದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ಅನುಸೂಚಿತ ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ-2006 ಹಾಗೂ ನಿಯಮ 2008ರಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 97,075 ಅರ್ಜಿಗಳನ್ನು ಸ್ವೀಕರಿಸಲಾಗಿದೆ. 2,444 ಅರ್ಜಿದಾರರಿಗೆ ಹಕ್ಕು ಪತ್ರ ವಿತರಿಸಿದ್ದು 2,893 ಅರ್ಜಿ ವಿಲೇವಾರಿಗೆ ಬಾಕಿ ಇವೆ. ಉಳಿದವುಗಳು ವಿವಿಧ ಕಾರಣಗಳಿಗೆ ತಿರಸ್ಕೃತಗೊಂಡಿವೆ. ಸರಕಾರದ ನಾಮನಿರ್ದೇಶಿತ ಸದಸ್ಯರು ಇಲ್ಲದೇ ಇರುವ ಉಪವಿಭಾಗೀಯ ಮಟ್ಟದ ಅರಣ್ಯ ಹಕ್ಕು ಸಮಿತಿಯಲ್ಲಿ ನಿಯಮಬಾಹಿರವಾಗಿ ವಜಾ ಆಗಿರುವ ಅರ್ಜಿಗಳ ಬಗ್ಗೆ ಸಲಹೆಗಳನ್ನು ಸ್ವೀಕರಿಸಿ ಪರಿಶೀಲಿಸಲಾಗುವುದು ಎಂದು ಹೇಳಿದರು.

ಹೊಸನಗರ ಹಾಗೂ ಇತರ ತಾಲೂಕುಗಳ ಕಂದಾಯ ಗ್ರಾಮಗಳಲ್ಲಿ ಯಾವುದೇ ಅಧಿಸೂಚನೆಯಾಗದೆ ‘ಸೂಚಿತ ಅರಣ್ಯವೆಂದು’ ಕಂದಾಯ ಇಲಾಖೆಗಳಲ್ಲಿ ದಾಖಲಿಸಿರುವುದನ್ನು ಕೈಬಿಡಬೇಕೆಂಬ ಬೇಡಿಕೆ ಕುರಿತು ಕಾನೂನು ಇಲಾಖೆಯ ಅಭಿಪ್ರಾಯ ಕೇಳಲಾಗಿದೆ. ಈ ಬಗ್ಗೆ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಇತರ ತಾಲೂಕುಗಳ ವ್ಯಾಪ್ತಿಯಲ್ಲಿ ಮೈಸೂರು ಲ್ಯಾಂಡ್ ರೆವಿನ್ಯೂ ಕೋಡ್ 1888 ರಲ್ಲಿ ಮಂಜೂರು ಮಾಡಲಾದ ಮನೆಗಳಿಗೆ ಹಂಗಾಮಿ ಮನೆಗಳೆಂದು ಇರುವ ಕಾರಣ ಅವರಿಗೆ ಬ್ಯಾಂಕ್ ಸಾಲ, ಪೋಡಿ ಇತರ ಸೌಲಭ್ಯಗಳು ಸಿಗುತ್ತಿಲ್ಲ. ಆದ್ದರಿಂದ ಹಂಗಾಮಿ ಮನೆದಳ ಪತ್ರವನ್ನು ಖಾಯಂಗೊಳಿಸುವ ಕುರಿತು ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಅಧಿಸೂಚಿತ ಅರಣ್ಯ ಪ್ರದೇಶದಲ್ಲಿ ಸರಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ನಿಮಯದಡಿ ಮಂಜೂರು ಮಾಡಲಾದ ಹಾಗೂ ರೈತರ ಸಾಗುವಳಿ ಮತ್ತು ಸ್ವಾಧೀನಾನುಭವದಲ್ಲಿರುವ ಭೂಮಿಯನ್ನು ಅರಣ್ಯ ಭೂಮಿ ಎಂದು ಇಂಡೀಕರಣ ಮಾಡುವುದನ್ನು ಕೈಬಿಡಬೇಕೆಂದು ರೈತರು ಮನವಿ ಮಾಡಿದ್ದು, ಈ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು. ಇದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಎಸ್ಪಿ ಮಿಥುನ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಮಲೆನಾಡು ರೈತರ ಹೋರಾಟ ಸಿಮಿತಿಯ ಪದಾಧಿಕಾರಿಗಳಾದ ತೀ.ನ.ಶ್ರೀನಿವಾಸ, ಶ್ರೀಕರ್, ರಮೇಶ್ ಹೆಗಡೆ ಇತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News