ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ: ಶಿವಮೊಗ್ಗದ ವಿವಿಧೆಡೆ ಈಡಿ ದಾಳಿ

ಶಿವಮೊಗ್ಗ: ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ)ನ ಗಾಂಧಿ ಬಜಾರ್ ಶಾಖೆಯಲ್ಲಿ 11 ವರ್ಷಗಳ ಹಿಂದೆ ನಕಲಿ ಚಿನ್ನಾಭರಣ ಅಡವಿಟ್ಟು 68 ಕೋಟಿ ಸಾಲ ಪಡೆದಿದ್ದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ಶಿವಮೊಗ್ಗ ನಗರ ಹಾಗೂ ಕುಂಸಿಯಲ್ಲಿ ದಾಳಿ ನಡೆಸಿದ್ದಾರೆ.
2014ರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ ಬೆಳಕಿಗೆ ಬಂದಾಗ ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅಧ್ಯಕ್ಷರಾಗಿದ್ದರು. ಆಗ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ಜಾಮೀನಿನ ಮೂಲಕ ಬಿಡುಗಡೆಯಾಗಿದ್ದರು.
ಇದೀಗ ಬ್ಯಾಂಕಿನ ಆಗಿನ ವ್ಯವಸ್ಥಾಪಕಿ ಶೋಭಾ ಅವರ ಗೋಪಾಲಗೌಡ ಬಡಾವಣೆಯಲ್ಲಿರುವ ಮನೆ ಹಾಗೂ ಶೋಭಾ ಅವರ ವಾಹನ ಚಾಲಕ ಕಾಮಾಕ್ಷಿ ಬೀದಿಯಲ್ಲಿರುವ ಶಿವಕುಮಾರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಹಗರಣ ಸಂಬಂಧ ಬೆಂಗಳೂರಿನಿಂದ ಬಂದ ಎಂಟಕ್ಕೂ ಹೆಚ್ಚು ಜಾರಿ ನಿರ್ದೇಶನಾಲಯದ ಅಧಿಕಾರಿಗಳು,ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭ ನಿವಾಸ ಹಾಗೂ ಕಾಮಾಕ್ಷಿ ಬೀದಿಯಲ್ಲಿರುವ ಶೋಭಾ ಅವರ ವಾಹನ ಚಾಲಕ ಶಿವಕುಮಾರ್ ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.
ಈ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿದೆ.