ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ: ಸೂಕ್ತ ಕಾನೂನು ಕ್ರಮಕ್ಕೆ ವಿಜಯೇಂದ್ರ ಆಗ್ರಹ
ಬಿ.ವೈ.ವಿಜಯೇಂದ್ರ
ಶಿವಮೊಗ್ಗ: ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.
ಶಿಕಾರಿಪುರ ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಕಾಂಗ್ರೆಸ್ ಶಾಸಕ ಹಾಗೂ ಕಾರ್ಯಕರ್ತರ ಕಿರುಕುಳದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿನಯ್ ಸೋಮಯ್ಯ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ನೋವಿನ ಸಂಗತಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಕಾರ್ಯಕರ್ತರ ಮೇಲೆ ವಿನಾಃ ಕಾರಣ ಮೊಕದ್ದಮೆ ದಾಖಲಿಸುತ್ತಿರುವುದು ಕಿರುಕುಳ ನೀಡುತ್ತಿರುವುದು ಕಂಡು ಬರುತ್ತಿದೆ ಎಂದು ದೂರಿದರು.
ರಾಜ್ಯ ಗೃಹ ಸಚಿವರು ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ಮಾನವೀಯತೆಯ ದೃಷ್ಠಿ ಮೇಲೆ ಈ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಆತ್ಮಹತ್ಯೆ ಹಿಂದೆ ಶಾಸಕರಿದ್ದರೂ ಅಥವಾ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು. ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು