ಖಾಸಗಿ ಮಾಫಿಯಾದಿಂದ 108 ಆಂಬುಲೆನ್ಸ್ ಗಳನ್ನು ದೂರವಿಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-02-02 12:52 GMT

ಬೆಂಗಳೂರು: ‘ನಮ್ಮ 108 ಆಂಬುಲೆನ್ಸ್ ಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಮಾಫಿಯಾಗಳ ಜತೆ ಕೈಜೋಡಿಸುವುದನ್ನು ತಪ್ಪಿಸಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ.

ಶುಕ್ರವಾರ ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಬೆಂಗಳೂರು ಮತ್ತು ಬಳ್ಳಾರಿ ಟೆಲಿ ಐಸಿಯು ಕ್ಲಸ್ಟರ್ ಉದ್ಘಾಟಿಸಿ ಮಾಡಿ ಮಾತನಾಡಿದ ಅವರು, ಆಂಬುಲೆನ್ಸ್ ಚಾಲಕರು ಖಾಸಗಿ ಆಸ್ಪತ್ರೆಗಳ ಜತೆ ಸೇರಿಕೊಂಡು ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆಂಬ ಅನೇಕ ದೂರುಗಳನ್ನು ಕೇಳಿದ್ದೇನೆ.

ಈ ಮಾಫಿಯಾ ತಪ್ಪಿಸಬೇಕು. ಇತ್ತೀಚೆಗಷ್ಟೇ ನೂರಾರೂ ಆಂಬುಲೆನ್ಸ್ ಗಳನ್ನು ಪರಿಚಯಿಸಲಾಗಿತ್ತು. ಇಂತಹ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆರೋಗ್ಯ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವುದು ನಮ್ಮ ಸರಕಾರದ ಹೆಮ್ಮೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಹೇಗೆ ಕೆಲಸ ಮಾಡುತ್ತೇವೆ ಎಂಬುದು ಮುಖ್ಯ’ ಎಂದು ತಿಳಿಸಿದರು.

‘ತಾಲೂಕು ಮಟ್ಟದಲ್ಲಿ ಐಸಿಯು ಕೇಂದ್ರಗಳನ್ನು ಸ್ಥಾಪಿಸಿ, ಇಲ್ಲಿಂದಲೇ ಅವುಗಳನ್ನು ಪರಿಶೀಲಿಸುವಂತಹ ತಂತ್ರಜ್ಞಾನಗಳ ಬಳಕೆ ಕಾರ್ಯ ನಡೆಯುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಕ್ರಾಂತಿಕಾರದ ಹೆಜ್ಜೆ. ಈ ಕಾರ್ಯಕ್ಕೆ ಅನೇಕರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಸಹಕಾರ ನೀಡುತ್ತಿದ್ದಾರೆ. ತಾಲೂಕು ಮಟ್ಟದಲ್ಲಿ 5-10 ಐಸಿಯು ಬೆಡ್‍ಗಳ ಆರೋಗ್ಯ ಘಟಕ ಸ್ಥಾಪಿಸಿ ರೋಗಿಗಳನ್ನು ಅಲ್ಲಿ ದಾಖಲಿಸಿ ಇಲ್ಲಿಂದ ಅವರ ಆರೋಗ್ಯವನ್ನು ಪರಿಶೀಲಿಸಿ. ಅವರಿಗೆ ಅಗತ್ಯ ಆರೋಗ್ಯ ಸೇವೆ ನೀಡುವ ವ್ಯವಸ್ಥೆ ಎಲ್ಲೆಡೆ ಜಾರಿ ಮಾಡಬೇಕು ಎಂದು ಹೇಳಿದರು.

‘ಇದು ಆರೋಗ್ಯ ಕ್ಷೇತ್ರದ ಯೋಜನೆ ಮಾತ್ರವಲ್ಲ. ಶಿಕ್ಷಣ ಕ್ಷೇತ್ರದ ಕ್ರಾಂತಿಯೂ ಆಗಿದೆ. ನಮ್ಮ ಬದುಕಿನಲ್ಲಿ ಪ್ರತಿನಿತ್ಯ ತಾಂತ್ರಿಕತೆ ವಿಚಾರವಾಗಿ ಅನೇಕ ಸಂಶೋಧನೆ ನಡೆಯುತ್ತಿವೆ. ನಮ್ಮ ರಾಜ್ಯ ದೇಶದ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಆರೋಗ್ಯ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ಹೆಲ್ತ್ ಟೂರಿಸಂನಲ್ಲೂ ನಮ್ಮ ರಾಜ್ಯ ಹೆಸರು ಮಾಡಿದೆ. ಖಾಸಗಿ ಆರೋಗ್ಯ ಸೇವಾದಾರರು ಈ ವಿಚಾರವಾಗಿ ತಮ್ಮದೆ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ನುಡಿದರು.

ಆರೋಗ್ಯ ಇಲಾಖೆಯಲ್ಲಿರುವ ಅಧಿಕಾರಿಗಳು ಬಹಳ ಬದ್ಧತೆ ಹೊಂದಿದ್ದಾರೆ. ಇಂತಹ ತಂಡದಿಂದ ಮಾತ್ರ ಈ ರೀತಿಯ ಕಾರ್ಯಕ್ರಮ ನೀಡಲು ಸಾಧ್ಯ. ಗ್ರಾಮೀಣ ಪ್ರದೇಶದ ಜನರನ್ನು ಬೆಂಗಳೂರಿಗೆ ತರುವಷ್ಟರಲ್ಲಿ ಅನಾಹುತ ಸಂಭವಿಸುತ್ತವೆ. ಹೀಗಾಗಿ ತಾಲೂಕು ಮಟ್ಟದಲ್ಲಿ ಐಸಿಯು ಬೆಡ್‍ಗಳ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಅವರು ಹೇಳಿದರು.

ಜನರ ಆರೋಗ್ಯ ಕಾಪಾಡಲು ಸರಕಾರ ಬದ್ಧವಾಗಿದೆ. ನಮ್ಮ ಆರೋಗ್ಯವೇ ನಮ್ಮ ನಿಜವಾದ ಆಸ್ತಿ. ಹೀಗಾಗಿ ನಾಡಿನ ಜನರ ಆರೋಗ್ಯ ಕಾಪಾಡಬೇಕು. ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದಿದ್ದಾರೆ. ಈ ಕ್ಷೇತ್ರದಲ್ಲಿ 24 ತಾಸು ಕೆಲಸ ಮಾಡಬೇಕಾಗುತ್ತದೆ. ಅಂತಹ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಮಾನವನ ಸೇವೆಗೆ ಮುಂದಾಗಿರುವುದಕ್ಕೆ ಅಭಿನಂದನೆಗಳು. ನಿಮ್ಮ ಜತೆ ಸರಕಾರ ಸದಾ ನಿಲ್ಲಲಿದೆ. ಇಂತಹ ನೂರಾರು ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂದು ಶಿವಕುಮಾರ್ ಹೇಳಿದರು.

ದೇಶದಲ್ಲಿ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ರಾಜ್ಯ ಎಂದರೆ ಅದು ಕರ್ನಾಟಕ. ರಾಜ್ಯದಲ್ಲೇ ಅತಿ ಹೆಚ್ಚು ವೈದ್ಯರನ್ನು ತಯಾರು ಮಾಡಲಾಗುತ್ತಿದೆ. ಇಲ್ಲಿ ತಯಾರಾಗುವ ವೈದ್ಯರನ್ನು ಹೊರರಾಜ್ಯಗಳು ಹಾಗೂ ದೇಶಗಳಿಗೆ ರವಾನೆ ಮಾಡುತ್ತಿದ್ದೇವೆ. ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ಆರ್ಥಿಕ ಸ್ವಾವಲಂಬನೆ ಕಂಡುಕೊಳ್ಳುವಂತೆ ಮಾಡಿಕೊಳ್ಳುವ ವ್ಯವಸ್ಥೆ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News