ದಿಲ್ಲಿ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ: 11 ಮಂದಿ ಮೃತ್ಯು

Update: 2024-02-16 13:32 GMT

Photo: PTI

ಹೊಸದಿಲ್ಲಿ: ದಿಲ್ಲಿಯ ಬಣ್ಣದ ಕಾರ್ಖಾನೆಯೊಂದರಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯು ದಿಲ್ಲಿಯ ಆಲಿಪುರ್‌ನ ಮಾರುಕಟ್ಟೆ ಪ್ರದೇಶದಲ್ಲಿ ಸಂಭವಿಸಿದೆ. ಈ ಬೆಂಕಿಯು ಪಕ್ಕದಲ್ಲೇ ಇದ್ದ ಎರಡು ಗೋದಾಮುಗಳು ಹಾಗೂ ಒಂದು ವ್ಯಸನ ಮುಕ್ತ ಕೇಂದ್ರಕ್ಕೂ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

11 ಮಂದಿ ಸಂತ್ರಸ್ತರ ಮೃತದೇಹಗಳು ಆಲಿಪುರ್‌ನ ದಯಾಳ್‌ಪುರ್ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಿಬ್ಬರು ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಬೆಂಕಿ ಅವಘಡದ ಕುರಿತು ಸಂಜೆ 5.25ಕ್ಕೆ ಅಗ್ನಿಶಾಮಕ ದಳಕ್ಕೆ ಮಾಹಿತಿ ದೊರೆತಿದ್ದು, ತಕ್ಷಣವೇ ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳನ್ನು ರವಾನಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿ ಅವಘಡ ಸಂಭವಿಸುವುದಕ್ಕೂ ಮುನ್ನ ಕಾರ್ಖಾನೆಯಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಕಾರ್ಖಾನೆಯೊಳಗೆ ರಾಸಾಯನಿಕಗಳನ್ನು ಸಂಗ್ರಹಿಸಿಟ್ಟಿದ್ದುದರಿಂದ ಈ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News