ರಾಜ್ಯಾದ್ಯಂತ 40 ಸೈಬರ್ ಕ್ರೈಮ್ ಪೊಲೀಸ್ ಠಾಣೆ ಆರಂಭ: ಗೃಹ ಸಚಿವ ಜಿ.ಪರಮೇಶ್ವರ್

Update: 2023-12-19 17:29 GMT

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 40 ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳನ್ನು ಆರಂಭಿಸಲು ಸರಕಾರ ಮುಂದಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ನಗರದ ಬಾರ್‌ಲೈನ್ ರಸ್ತೆಯ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ನೂತನ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡುವುದು ಪೊಲೀಸ್ ಇಲಾಖೆಗೆ ಸವಾಲಿನ ಕೆಲಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳನ್ನು ಆರಂಭಿಸಲು ಮುಂದಾಗಿದೆ ಎಂದು ಹೇಳಿದರು.

ಪೊಲೀಸರು ರಾಜ್ಯ ಸರಕಾರದ ಪ್ರಮುಖ ಭಾಗವಾಗಿದೆ. ಕರ್ನಾಟಕದ ಪೊಲೀಸ್ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಪೊಲೀಸರು ಅತ್ಯುತ್ತಮವಾಗಿ ಕೆಲಸ ಮಾಡಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರಕಾರದ ಕರ್ತವ್ಯವಾಗಿದ್ದು, ರಾಜ್ಯ ಸರಕಾರ ಪೊಲೀಸರು ಹಾಗೂ ಪೊಲೀಸ್ ಇಲಾಖೆಗೆ ಅಗತ್ಯವಾಗಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಬದ್ಧವಾಗಿದೆ ಎಂದರು.

ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಯಾವುದೇ ಕೀಳರಿಮೆ ಇರಬಾರದು. ಪೊಲೀಸರು ಸಮಾಜದ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಸಮಾಜದ ಭಾಗವೇ ಆಗಿದ್ದಾರೆ. ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ವಿಶೇಷ ಕಾಳಜಿ ವಹಿಸಿದೆ. ಈ ಹಿಂದೆ ಪೊಲೀಸರು ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಹಳೆಯ ಶಿಥಿಲ ಕಟ್ಟಡಗಳಲ್ಲಿ ವಾಸ ಮಾಡುತ್ತಿದ್ದರು. ಇದನ್ನು ನಾನು ಕಣ್ಣಾರೆ ಕಂಡಿದ್ದು, ಪೊಲೀಸರು ಉತ್ತಮವಾಗಿ ಕಾರ್ಯ ನಿರ್ವಹಿಸುವಂತಾಗಲು ವಸತಿ, ಆರೋಗ್ಯ ವಿಮೆಯಂತಹ ಸೌಲಭ್ಯಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಪೊಲೀಸ್ ಗೃಹ ಯೋಜನೆಯಡಿಯಲ್ಲಿ ಇದುವರೆಗೆ ರಾಜ್ಯಾದ್ಯಂತ 46ಸಾವಿರ ವಸತಿಗೃಹಗಳನ್ನು ನಿರ್ಮಿಸಿದ್ದು, ಶೇ.46ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು. ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗೂ ವಸತಿ ಸೌಲಭ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದ ಸಚಿವರು, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವುದು ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯನ್ನು ಆಧುನೀಕರಣ ಮಾಡಲು ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ನುಡಿದರು.

ರಾಜ್ಯದಲ್ಲಿ ಈ ಬಾರಿ ಕಂಡು ಕೇಳರಿಯದ ಬರ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲೂ ರಾಜ್ಯ ಸರಕಾರ ಬರ ಪರಿಹಾರಕ್ಕೆ ಅಗತ್ಯ ಕ್ರಮಕೈಗೊಂಡಿದೆ. ಅಭಿವೃದ್ಧಿಗೆ ಒತ್ತು ನೀಡಿದೆ. ಬರ ಪರಿಹಾರಕ್ಕೆ ಕೇಂದ್ರದ ಬಳಿ 15 ಸಾವಿರ ಕೋ. ರೂ. ಅನುದಾನ ಕೇಳಿದ್ದು, ಇನ್ನೂ ಅನುದಾನ ನೀಡಿಲ್ಲ. ಆದರೂ ಸರಕಾರ ಬರ ಪರಿಹಾರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು ರಾಜ್ಯದಲ್ಲ ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ನಿಧಿಯಲ್ಲಿ ಬರ ಪರಿಹಾರಕ್ರಮಗಳಿಗಾಗಿ 5 ಕೋ. ರೂ. ಮೀಸಲಿಡಲಾಗಿದೆ. ರಾಜ್ಯ ಸರಕಾರ ಇಡೀ ದೇಶದಲ್ಲಿ ಮಾದರಿ ಆಡಳಿತ ನೀಡುತ್ತಿದೆ ಎಂದು ಗೃಹ ಪರಮೇಶ್ವರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಯನ್ನು ಗೌರವಿಸಲಾಯಿತು. ಇದೇ ವೇಳೆ ನೀತನ ವಸತಿ ಸಮುಚ್ಚಯದಲ್ಲಿ ವಸತಿ ಸೌಲಭ್ಯ ಪಡೆದವರಿಗೆ ಮನೆಗಳ ಕೀಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ರಾಜೇಗೌಡ, ನಯನಾ ಮೋಟಮ್ಮ, ನಗರಸಭೆ ಅಧ್ಯಕ್ಷ ವೇಣುಗೋಪಾಲ್, ಡಿಐಜಿ ಚಂದ್ರಗುಪ್ತ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್ಪಿಡಾ.ವಿಕ್ರಮ್ ಅಮಟೆ, ಎಡಿಜಿಪಿ ಹಿತೇಂದ್ರ ಮತ್ತಿತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News