ಶೇ 40ರಷ್ಟು ಕಮಿಷನ್ ಆರೋಪ ; ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿ: ಆರ್.ಅಶೋಕ್‌ ಆಗ್ರಹ

Update: 2024-02-10 13:51 GMT

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್ ಸರಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರಕಾರದ ಮೇಲೆ ಶೇ.40ರಷ್ಟು ಕಮಿಷನ್ ನ ಆರೋಪ ಮಾಡಿದ್ದಾರೆ. ಕಮಿಷನ್ ಕೊಡುವವರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರಕಾರ ಬಂದ ಆರಂಭದಿಂದಲೇ ಕಮಿಷನ್ ದಂಧೆ ಹಾಗೂ ಲೂಟಿ ನಡೆಯುತ್ತಿದೆ’ ಎಂದು ದೂರಿದರು.

ತೆರಿಗೆ ಅಧಿಕಾರಿಗಳು ದಾಳಿ ಮಾಡಿದಾಗಲೂ ಕಾಂಗ್ರೆಸ್ ಬೆಂಬಲಿಗರ ಮನೆಗಳಲ್ಲಿ ಎರಡು ಕಡೆ ಐವತ್ತು- ಐವತ್ತು ಕೋಟಿ ರೂ.ಹಣ ಸಿಕ್ಕಿದೆ. ಇದು ಲೂಟಿ ಹೊಡೆದ ಹಣ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಎಂದು ಪ್ರಶ್ನಿಸಿದರು. ಈ ಹಿಂದೆ ಐದು ರಾಜ್ಯಗಳ ಚುನಾವಣೆಗಾಗಿ ಲೂಟಿ ನಡೆಯಿತು. ಈಗ ಮುಂದೆ ಬರುವ ಲೋಕಸಭಾ ಚುನಾವಣೆಗೆ ಎತ್ತುವಳಿ ನಡೆಯುತ್ತಿದೆ. ಎಲ್ಲವನ್ನೂ ಜನತೆ ಗಮನಿಸುತ್ತಿದ್ದಾರೆ. ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಯಾರ ಮುಖದ ಮೇಲೆ ಅಂಟಿಸಿಕೊಳ್ಳುತ್ತಾರೆ: ಇದೇ ಕೆಂಪಣ್ಣ ನಮ್ಮ ಸರಕಾರದ ಅವಧಿಯಲ್ಲಿ ಆರೋಪ ಮಾಡಿದಾಗ ಸಿಎಂ ಸಿದ್ದರಾಮಯ್ಯನವರು ಪೇಸಿಎಂ ಎಂಬ ಪೋಸ್ಟರ್ ಅಂಟಿಸಿದ್ದರು. ಈಗ ಯಾರ ಮುಖದ ಮೇಲೆ ಯಾವ ಪೋಸ್ಟರ್ ಅಂಟಿಸಿಕೊಳ್ಳುತ್ತಾರೆ? ಪೇ ಸಿದ್ದರಾಮಯ್ಯ, ಎಟಿಎಂ ಸಿದ್ದರಾಮಯ್ಯ ಎಂದು ಅಂಟಿಸಿಕೊಳ್ಳುತ್ತಾರಾ? ಎಂದು ಅಶೋಕ್ ಪ್ರಶ್ನಿಸಿದರು.

ಹಕ್ಕುಚ್ಯುತಿ ಮಂಡಿಸಲಿ: ‘ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತಪತ್ರವನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಅದರಲ್ಲಿ ತಪ್ಪಿದ್ದರೆ, ಏನಾದರೂ ಅನುಮಾನಗಳಿದ್ದಲ್ಲಿ ಹಕ್ಕುಚ್ಯುತಿ ಮಂಡಿಸಲು ಅವಕಾಶವಿದೆ. ಧಮ್ ಇದ್ದರೆ ಕಾಂಗ್ರೆಸ್ ನಾಯಕರು ಹಕ್ಕುಚ್ಯುತಿ ಮಂಡಿಸಲಿ’ ಎಂದು ಸವಾಲು ಎಸೆದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News