ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ| ಎಸ್‍ಐಟಿ ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

Update: 2024-04-30 15:06 GMT

ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ(ಎಸ್‍ಐಟಿ)ವನ್ನು ರಚನೆ ಮಾಡಿದೆ. ಅವರು ನೀಡುವ ತನಿಖಾ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿಯವರು ಈಗಾಗಲೆ ತನಿಖೆಯನ್ನು ಆರಂಭಿಸಿದ್ದಾರೆ. ಅವರು ತನಿಖಾ ವರದಿಯನ್ನು ಸಲ್ಲಿಸಿದ ಬಳಿಕ ಸರಕಾರ ಈ ಬಗ್ಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತದೆ ಎಂದರು.

ಸಿದ್ದರಾಮಯ್ಯ ಅವರ ಪುತ್ರನ ನಿಧನದ ಸಂದರ್ಭದಲ್ಲಿ ಬಿಜೆಪಿ ನಾಯಕರಿಂದ ದೊರೆತ ಸಹಾಯವನ್ನು ಮರೆತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಪುತ್ರನ ಸಾವು ವಿದೇಶದಲ್ಲಿ ಸಂಭವಿಸಿದ್ದು, ದೇಶಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು. ಇದರಲ್ಲಿ ಪ್ರಧಾನಿ ಮೋದಿ ಅಥವಾ ಇತರರ ಯಾವ ನಾಯಕರ ಸಹಾಯವನ್ನು ನಾನು ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರದಲ್ಲಿ ಬಿಜೆಪಿ ಸರಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ಕಾಂಗ್ರೆಸ್ ಪರ ಬೆಂಬಲ ನಿರೀಕ್ಷೆಗೆ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಲಾಗುತ್ತಿದೆ. ಆದರೆ ಮೋದಿ 2014 ಹಾಗೂ 2019 ರ ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ಹೇಳಿದರು.

ಮಣಿಪುರ ಹಿಂಸಾಚಾರದಲ್ಲಿ ಕೇಂದ್ರ ಕ್ರಮ ಕೈಗೊಂಡಿಲ್ಲ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಟೀಕಿಸುತ್ತಿರುವ ನರೇಂದ್ರ ಮೋದಿ, ಮಣಿಪುರದಲ್ಲಿ ನಡೆದಂತಹ ಹಿಂಸಾಚಾರದ ಘಟನೆಯಲ್ಲಿ ಏನು ಕ್ರಮ ಕೈಗೊಂಡಿದ್ದಾರೆ. 30 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮುಸ್ಲಿಮರಿಗೆ ನೀಡುತ್ತಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಿದ್ದರು ಎಂದು ಅವರು ಹೇಳಿದರು.

ಸರಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಮ್ ಸಮುದಾಯದ ಮುಖಂಡರು ಸುಪ್ರೀಂಕೋರ್ಟ್‍ಗೆ ಹೋದಾಗ, ಈ ಮೀಸಲಾತಿಯನ್ನು ಮುಂದುವರೆಸುವುದಾಗಿ ಬೊಮ್ಮಾಯಿ ಸರಕಾರ ಮುಚ್ಚಳಿಕೆಯನ್ನು ಬರೆದುಕೊಟ್ಟಿತು ಎಂದು ಸಿದ್ದರಾಮಯ್ಯ ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News