ಒಲಂಪಿಕ್ಸ್‌ಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕ್ರಮ: ಸಚಿವ ನಾಗೇಂದ್ರ

Update: 2023-12-06 12:29 GMT

ಬೆಳಗಾವಿ: ‘2024ರ ಒಲಂಪಿಕ್ ಕ್ರೀಡೆಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ತಲಾ 10ಲಕ್ಷ ರೂ. ವೆಚ್ಚದಲ್ಲಿ ತರಬೇತಿ ಕೊಡಿಸಲಾಗುತ್ತಿದೆ. ಅಲ್ಲದೆ, 180 ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಮೂಲಕ ತರಬೇತುದಾರರ ಕೊರತೆಯೂ ನೀಗಲಿದೆ’ ಎಂದು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಪಕ್ಷೇತರ ಸದಸ್ಯ ದರ್ಶನ್ ಪುಟ್ಟಣ್ಣಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತಿ ಯೋಜನೆಯಡಿ 75 ಮಂದಿಯನ್ನು ಆಯ್ಕೆ ಮಾಡಿಕೊಂಡು ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಸೇರಿದಂತೆ ಹಲವು ಸೌಲಭ್ಯಗಳ ಮೂಲಕ ಕ್ರೀಡೆಗೆ ಬೆಂಬಲ ನೀಡಲಾಗುತ್ತಿದೆ ಎಂದು ಹೇಳಿದರು.

2024ರ ಒಲಂಪಿಕ್ ಕ್ರೀಡೆಗೆ ಸಜ್ಜುಗೊಳ್ಳುವ ಕ್ರೀಡಾಪಟುಗಳಿಗೆ ಆಹಾರದಿಂದ ಹಿಡಿದು ಎಲ್ಲ ರೀತಿಯ ಕಾಳಜಿಯನ್ನು ವಹಿಸಲಾಗುತ್ತಿದೆ. ಪ್ರತಿಯೊಬ್ಬರ ತರಬೇತಿಗೆ 10ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

‘ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಆದರೆ, ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ’ ಎಂದು ದರ್ಶನ್ ಪುಣ್ಣಯ್ಯ ಗಮನ ಸೆಳೆದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News