ಕುಮಾರಸ್ವಾಮಿ-ಯಡಿಯೂರಪ್ಪ ವಿರುದ್ಧ ಭೂ ಕಬಳಿಕೆ ಆರೋಪ | ಕೆಪಿಸಿಸಿ ಕಚೇರಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

Update: 2024-09-19 14:51 GMT

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಬಡಾವಣೆಯಲ್ಲಿನ 1 ಎಕರೆ 11 ಗುಂಟೆ ಸರಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಸತ್ತೋದವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ. ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೇ ಭೂ ಸ್ವಾಧೀನ ಮಾಡಿಕೊಂಡಿದೆ ಎಂದು ಹೇಳಿದರು.

1976ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ? ಪ್ರಶ್ನಿಸಿದ ಕೃಷ್ಣ ಬೈರೇಗೌಡ, ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಕುಮಾರಸ್ವಾಮಿಗೆ ಅರ್ಜಿ ಹಾಕಿದ್ದಾರೆ ಎಂದು ತಿಳಿಸಿದರು.

ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿ ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ. ಆದರೆ, ಅಧಿಕಾರಿಗಳು, ‘1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ’ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿ ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ? ‘ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆ ಜಿಪಿಎ ಮಾಡಿಕೊಳ್ಳುತ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ ಎಂದು ಅವರು ತಿಳಿಸಿದರು.

ಆನಂತರ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗೂಸಿಯಂತೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮ ವಹಿಸಲು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ ಎಂದು ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

ಯಡಿಯೂರಪ್ಪ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಮಲಿಂಗಂ, ‘ಗಂಗೇನಹಳ್ಳಿ ಬಡಾವಣೆಯ ಈ ಭೂಮಿಯನ್ನು ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ’ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನಕಾರ್ಯದರ್ಶಿಯ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಕಡತದ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

ಒಟ್ಟಾರೆ ಈ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿಸಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ ಎಂದು ಅವರು ದೂರಿದರು.

ಅಲ್ಲದೆ, ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‍ನಲ್ಲಿ ಅಪೀಲು ವಜಾ ಆಗಿ 25 ಸಾವಿರ ರೂ. ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಕೃಷ್ಣ ಬೈರೇಗೌಡ ಆಗ್ರಹಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ವಿರುದ್ಧ ಕುಮಾರಸ್ವಾಮಿ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಆದರೆ, ಈವರೆಗೆ ಯಾವುದೆ ದಾಖಲೆ ನೀಡಿಲ್ಲ. ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ ಎಂದು ಹೇಳಿದರು.

ನಾವು ಮಾಡಿರುವ ಆರೋಪಗಳಿಗೆ ಕುಮಾರಸ್ವಾಮಿ ಉತ್ತರ ನೀಡಬೇಕು. ರಾಜಶೇಖರಯ್ಯಗೂ ಈ ಆಸ್ತಿಗೂ ಏನು ಸಂಬಂಧ? ನೀವು ಮುಖ್ಯಮಂತ್ರಿ ಆಗಿದ್ದ ಕೊನೆಯ ದಿನಗಳಲ್ಲಿ ಏನೆಲ್ಲ ಮಾಡಿದ್ದೀರಾ? ಜಮೀನಿನ ಮೂಲ ಮಾಲಕರು ನಿಮ್ಮ ಅತ್ತೆ, ಬಾಮೈದನಿಗೆ ನೋಂದಣಿ ಮಾಡಿಕೊಟ್ರಾ? ಈಗ ಆ ಜಮೀನನ್ನು ಚೆನ್ನಪ್ಪ ಎಂಬವರಿಗೆ ಮಾರಾಟ ಮಾಡಿದ್ದು ನಿಜಾನಾ, ಸುಳ್ಳಾ? ಎಂದು ಅವರು ಪ್ರಶ್ನಿಸಿದರು.

ಈ ಜಮೀನಿನ ವಿಚಾರದಲ್ಲಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ನಡುವೆ ಏನು ಒಳ ಒಪ್ಪಂದ ಆಗಿದೆ. ನೂರಾರು ಕೋಟಿ ಬೆಲೆ ಬಾಳುವ ಈ ಆಸ್ತಿಯನ್ನು ಕೇವಲ 60 ಲಕ್ಷ ರೂ.ಗಳಿಗೆ ಲಪಟಾಯಿಸಲಾಗಿದೆ. ಲೋಕಾಯುಕ್ತದವರು ಈ ಪ್ರಕರಣವನ್ನು ತೆಗೆದುಕೊಳ್ಳಬೇಕು. ಎಫ್‍ಐಆರ್ ಆಗಿ 9 ವರ್ಷ ಆಗಿದೆ. ತನಿಖೆ ಆದರೆ ಇವರಿಬ್ಬರೂ ಸಿಕ್ಕಿ ಬೀಳುತ್ತಾರೆ. ಕುಮಾರಸ್ವಾಮಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವ ಸಂತೋಷ್‌ ಲಾಡ್, ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ, ಕೆಪಿಸಿಸಿ ಸಂವಹನ ಹಾಗೂ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ವಿಜಯ್ ಮತ್ತಿಕಟ್ಟಿ, ಉಪ ಮುಖ್ಯಮಂತ್ರಿಯ ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ್ಯ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News