ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Update: 2023-07-10 15:05 GMT

ಬೆಂಗಳೂರು, ಜು.10: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣದ ನೇರ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಸೊಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. 

ಫಲಾನುಭವಿಗಳ ಖಾತೆಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ದೊರಕಿತು. 

ಬಳಿಕ ಮಾತನಾಡಿದ ಸಿಎಂ, ‘ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿಯಾದ ‘ಡರ್ಟಿ ಪಾಲಿಟಿಕ್ಸ್’ ಮಾಡುತ್ತಿದೆ. ಅವರೇನು ಅಕ್ಕಿಯನ್ನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ.ನಮ್ಮಿಂದ ತೆಗೆದುಕೊಳ್ಳುತ್ತಿದ್ದರು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

'ರಾಜ್ಯದ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಬಳಿಕ ಕೇಂದ್ರ ಸರಕಾರ ಅಕ್ಕಿಯನ್ನು ಇ-ಹರಾಜು ಮೂಲಕ ಮಾರಾಟ ಮಾಡಲು ಪ್ರಯತ್ನಿಸಿತು. ಆದರೆ ಯಾರೊಬ್ಬರೂ ಅಕ್ಕಿ ಖರೀದಿಸಲು ಮುಂದೆ ಬರುತ್ತಿಲ್ಲ' ಎಂದು ಅವರು ಹೇಳಿದರು.

'ಕೇಂದ್ರ ಸರಕಾರದ ಈ ನಡೆಯನ್ನು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕನ್ನಡ ಜನತೆಯ, ಬಡವರ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, 4.42 ಕೋಟಿ ಫಲಾನುಭವಿಗಳಿಗೆ ತಲಾ 170 ರೂ.ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತಿದೆ' ಎಂದರು.

ಅನ್ನಭಾಗ್ಯ ಯೋಜನೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ನೀಡುವುದಾಗಿ ಗ್ಯಾರಂಟಿ ನೀಡಿದ್ದೆವು. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶಾದ್ಯಂತ ಚರ್ಚೆ ಹಾಗೂ ರಾಜಕೀಯ ನಡೆಯುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ನೀಡಿ ಕೇಂದ್ರ ಸರಕಾರ ಹೃದಯ ಶ್ರೀಮಂತಿಕೆ ಮೆರೆಯಬಹುದಿತ್ತು ಎಂದರು.

200 ಯೂನಿಟ್ ಉಚಿತ, 2 ಸಾವಿರ ಖಚಿತ, 10 ಕೆ.ಜಿ ಅಕ್ಕಿ ನಿಶ್ಚಿತ ಎಂಬುದನ್ನು ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 4-5 ಸಾವಿರ ರೂ.ಗಳಷ್ಟು ನೆರವಾಗಲಿದೆ. ದೇಶದಲ್ಲೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರಿಗೆ ಈ ರೀತಿ ನೆರವು ನೀಡುತ್ತಿದೆ ಎಂದು ಶಿವಕುಮಾರ್ ಹೇಳಿದರು.

‘ಅನ್ನಭಾಗ್ಯ ಯೋಜನೆ’ಯ ಮಾಹಿತಿ ಪತ್ರ ಅನಾವರಣಗೊಳಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ತಲಾ 170 ರೂ.ಗಳಂತೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಬಿ.ಎಸ್.ಸುರೇಶ್, ಝಮೀರ್ ಅಹ್ಮದ್ ಖಾನ್, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಶಾಸಕ ಎನ್.ಎ. ಹಾರಿಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


 

 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News