ಗೊಡ್ಡು ಬೆದರಿಕೆ ಮೂಲಕ ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ : ಬಿ.ವೈ.ವಿಜಯೇಂದ್ರ

Update: 2024-07-29 13:10 GMT

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗೊಡ್ಡು ಬೆದರಿಕೆಗಳಿಗೆ ನಮ್ಮ ಕಾರ್ಯಕರ್ತರು ಅಂಜುವುದಿಲ್ಲ. ನಮ್ಮ ಹೋರಾಟ, ಪಾದಯಾತ್ರೆಯನ್ನು ಹತ್ತಿಕ್ಕಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮಂಗಳವಾರ ನಗರದ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಯ ಪೂರ್ವ ತಯಾರಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನಮ್ಮ ಹೋರಾಟ ನಿರಂತರವಾಗಿ ಇರಲಿದೆ. ಪರಿಶಿಷ್ಟ ಸಮುದಾಯದ ಹಣ ಲೂಟಿ ಮಾಡಿದ್ದಾರೆ. ಸಾವಿರಾರು ಕೋಟಿಯ ಭ್ರಷ್ಟಾಚಾರ ನಡೆಸಿದ್ದಾರೆ. ಇವುಗಳ ವಿರುದ್ಧ ಹೋರಾಟ ನಡೆಸದೆ ಇದ್ದರೆ ಭಗವಂತನೂ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪೆನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಬಳಿಕ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿದ್ದರು. ಹೆಂಡ ಖರೀದಿಯೂ ಮಾಡಿದ್ದನ್ನು ಈ.ಡಿ. ಉಲ್ಲೇಖಿಸಿದೆ ಎಂದು ಅವರು ಗಮನ ಸೆಳೆದರು.

ಬಿಜೆಪಿ, ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ. ಮುಡಾದಲ್ಲಿ ಸಿದ್ದರಾಮಯ್ಯನವರ ಕುಟುಂಬ ಪಡೆದ 14 ನಿವೇಶನಗಳು ಮುಡಾಕ್ಕೆ ವಾಪಸ್ ಬಂದು ಬಡವರಿಗೆ ಹಂಚಿಕೆ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೂರರಿಂದ ನಾಲ್ಕು ಸಾವಿರ ಕೋಟಿ ರೂ. ಬೆಲೆಬಾಳುವ ನಿವೇಶನಗಳನ್ನು ಮನಸೋ ಇಚ್ಛೆ ಕೊಡಲಾಗಿದೆ. ಸ್ವತಃ ಸಿದ್ದರಾಮಯ್ಯನವರೇ ನೇಮಿಸಿದ ಮುಡಾ ಅಧ್ಯಕ್ಷ ಮರಿಗೌಡರೇ ಇದನ್ನು ಬಾಯಿ ಬಿಟ್ಟಿದ್ದಾರೆ. ಇನ್ನು ಮುಂದೆ ನಿವೇಶನ ಹಂಚದಿರಲು ಕಡತದಲ್ಲಿ ಮುಡಾ ಅಧ್ಯಕ್ಷರೇ ಸೂಚಿಸಿದ್ದರು. ಜಿಲ್ಲಾಧಿಕಾರಿ ತನಿಖೆಯನ್ನೂ ಮಾಡಿಸಿದ್ದರು. ತನಿಖಾ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ಅದು ಸರಿ ಇರುವುದಾಗಿ ಸರಕಾರವೂ ಹೇಳಿತ್ತು ಎಂದು ವಿಜಯೇಂದ್ರ ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯನವರ ಬಾವಮೈದುನ 3.16 ಎಕರೆ ಜಮೀನನ್ನು ಅತಿ ಕಡಿಮೆ ಬೆಲೆಗೆ ಪಡೆದಿದ್ದಾರೆ. ಇದೇನಾ ನಿಮ್ಮ ಜನಪರತೆ. ಮುಡಾ ವಶಕ್ಕೆ ಪಡೆದಿರುವ ಜಾಗವನ್ನು ಖರೀದಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್‍ಕುಮಾರ್, ಪ್ರೀತಂ ಗೌಡ, ಪಿ.ರಾಜೀವ್, ನಂದೀಶ್ ರೆಡ್ಡಿ, ಬಿಜೆಪಿ ಉಪಾಧ್ಯಕ್ಷ ಬೈರತಿ ಬಸವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News