ಬಸವಣ್ಣ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಸಂಪುಟ ಸಭೆ ಘೋಷಣೆ

Update: 2024-01-18 13:43 GMT

ಬೆಂಗಳೂರು: ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ತೀರ್ಮಾನಿಸಿದೆ. ಸರಕಾರದ ಈ ತೀರ್ಮಾನ ಸಿಎಂ ಆದ ನನಗೆ ಅತೀವ ಹೆಮ್ಮೆ, ತೃಪ್ತಿಯನ್ನು ಉಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿ ಯೋಜನೆಯಲ್ಲಿಯೂ ಕಾಣಬಹುದು ಎಂದು ಹೇಳಿದ್ದಾರೆ.

ಇದು ಕೇವಲ ಘೋಷಣೆ ಅಲ್ಲ, ಬಸವತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ. ಬಸವಣ್ಣರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರಕಾರಕ್ಕೆ ಇದೆ. ಈ ಎಲ್ಲ ಸ್ವಾಮಿಗಳ ಆಶೀರ್ವಾದ ನಮ್ಮ ಸರಕಾರದ ಮೇಲೆ ಇರಲಿ ಎಂದು ಅವರು ಕೋರಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನ ವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೆ ರಾಜ್ಯದ ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತದ ಇತಿಹಾಸದಲ್ಲಿ 12ನೇ ಶತಮಾನ ಅತ್ಯಂತ ಮಹತ್ವಪೂರ್ಣವಾದುದು. ಅಜ್ಞಾನ, ಜಾತೀಯತೆ, ಮತಾಂಧತೆ, ಶೋಷಣೆ, ಮೌಢ್ಯಗಳಿಂದ ಮುಳುಗಿ ಹೋಗಿದ್ದ ಸಮಾಜವನ್ನು ಮೇಲೆತ್ತಲು ಅರಸ ಬಿಜ್ಜಳನಿಗೆ ಹಣಕಾಸು ಸಚಿವರಾಗಿದ್ದ ಬಸವಣ್ಣ, ರಾಜಿ ಇಲ್ಲದ ಬದ್ಧತೆ, ಪ್ರಶ್ನಾತೀತವಾದ ಜನಪರ ಕಾಳಜಿ ಮೂಲಕ ಮಾಡಿದ ಪ್ರಯತ್ನ-ಪ್ರಯೋಗಗಳು ಪ್ರಪಂಚದ ಎಲ್ಲ ಆಡಳಿತಗಾರರ ಆದರ್ಶವೆಂದು ನಾನು ನಂಬಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಾಯಕ ಮತ್ತು ದಾಸೋಹ ನನ್ನ ಇಷ್ಟದ ಬಸವಣ್ಣನವರ ತತ್ವದ ಮೂಲಧಾತುಗಳು. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಸಂಪತ್ತಿನ ಉತ್ಪಾದನೆಯ ಶಕ್ತಿ ಎಲ್ಲರದ್ದಾಗಬೇಕು, ಅದರ ವಿತರಣೆ ಸಮನಾಗಿ ನಡೆಯಬೇಕು ಎಂದು ಬಸವಣ್ಣನವರ ಆಶಯವಾಗಿತ್ತು. ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಇಷ್ಟೊಂದು ಸರಳವಾಗಿ ವಿಶ್ಲೇಷಿಸುವುದು ಸಾಧ್ಯ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃ ಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೆ ಪ್ರೇರಿತವಾದುದು ಎಂದು ಅವರು ತಿಳಿಸಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ‘ಕರ್ನಾಟಕ ಅಭಿವೃದ್ಧಿ ಮಾದರಿ’ಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನ ಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರಕಾರದ ಬದ್ಧತೆಗೂ ಬಸವಣ್ಣ ಪ್ರೇರಕ ಶಕ್ತಿ. ಬಸವಣ್ಣ ಕನ್ನಡವನ್ನು ಅಂದಿನ ಧರ್ಮ, ವಿಚಾರ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆಗೆ ಬೆಲೆ ಕಟ್ಟಲಾರದು. ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೆ 12ನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದು ಅವರು ಹೇಳಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನ ದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ನಾನು ಕೃತಜ್ಞತಾಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಈ ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮ ಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಮುಖ್ಯಮಂತ್ರಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News