ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಟು ಆತ್ಮಹತ್ಯೆ

Update: 2023-10-26 12:49 GMT

ಧನಲಕ್ಷ್ಮಿ - ಮೃತಪಟ್ಟವರು

ಬೆಂಗಳೂರು, ಅ.26: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.

ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್‍ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೂಮ್‍ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ಧನಲಕ್ಷ್ಮೀ ಕುಟುಂಬ, 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ, ಕಾಡುಗೋಡಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News