ಬಿಜೆಪಿ-ಜೆಡಿಎಸ್ ಮೈತ್ರಿ: ಕುಮಾರಸ್ವಾಮಿ-ವಿಜಯೇಂದ್ರ ಸಮಾಲೋಚನೆ

Update: 2023-11-26 13:29 GMT

PHOTO:x//@BYVijayendra

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಮನಗರದ ಬಿಡದಿಯ ತೋಟದ ಮನೆಯಲ್ಲಿ  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈತ್ರಿ ಸಂಬಂಧ ರವಿವಾರ ಮಹತ್ವದ ಮಾತುಕತೆ ನಡೆಸಿದರು.

ಮುಂಬರುಯವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ, ಬೆಳಗಾವಿ ವಿಧಾನ ಮಂಡಲ ಅಧಿವೇಶನ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಮಾಲೋಚನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ‘ದೇಶದ ಹಿತದೃಷ್ಟಿಯಿಂದ ಮುಂದಿನ ಅವಧಿಗೂ ಮೋದಿಯವರೇ ಪ್ರಧಾನಿ ಆಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಕ್ಷೇತ್ರ ಹಂಚಿಕೆ ಕುರಿತು ಹೈಕಮಾಂಡ್‍ನಲ್ಲಿ ಮಟ್ಟದಲ್ಲಿ ಚರ್ಚಿಲಾಗುವುದು. ರಾಜ್ಯದಲ್ಲಿ ನಮ್ಮ ಮೈತ್ರಿಕೂಟ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಲಿದ್ದೇವೆ’ ಎಂದು ಭರವಸೆ ವ್ಯಕ್ತಪಡಿಸಿದರು.

‘2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಯಡಿಯೂರಪ್ಪ ಹಾಗೂ ನಾನು ಜೊತೆಯಾಗಿ ಅತ್ಯುತ್ತಮ ಕೆಲಸ ನಿರ್ವಹಿಸಿದ್ದೇವೆ. ಅದು ಪುನಃ ಮರುಕಳಿಸಬೇಕೆಂಬುದು ರಾಜ್ಯದ ಜನರ ಆಸೆಯಾಗಿದೆ. ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ, ನಾನು ಎರಡೂ ಪಕ್ಷಗಳ ಎಲ್ಲ ನಾಯಕರು ಜೊತೆಗೂಡಿ 2006-07ರ ಉತ್ತಮ ಸ್ಥಿತಿಯನ್ನು ಮರಳಿ ತರಲು ಶ್ರಮಿಸುತ್ತೇವೆ’ ಎಂದು ಅವರು ನುಡಿದರು.

ಇಬ್ಬರು ಸಹೋದರರು: ‘ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಹೋದರರ ರೀತಿ ರಾಜ್ಯದಲ್ಲಿ ಓಡಾಡಲಿದ್ದಾರೆ. ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳು ಒಟ್ಟಾಗಿ ಹೋರಾಟ ನಡೆಸಲಿವೆ. ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ದಾಖಲೆ ಸಮೇತ ಎತ್ತಿ ಹಿಡಿಯುತ್ತೇವೆ’ ಎಂದು ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ನ ಏಕೈಕ ಸಂಸದನೂ ಇರಬಾರದು: ‘ರಾಜ್ಯದ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಒಟ್ಟಾಗಿ ಹೋಗುವ ಕುರಿತು ಇಬ್ಬರು ಮಾತುಕತೆ ನಡೆಸಿದ್ದೇವೆ. ಹೊಸದಿಲ್ಲಿಯಲ್ಲಿ ಪಕ್ಷದ ವರಿಷ್ಠರು ಸೀಟು ಹಂಚಿಕೆ ಬಗ್ಗೆ ಚರ್ಚಿಸುತ್ತಾರೆ’ ಎಂದು ವಿಜಯೇಂದ್ರ ಮಾಧ್ಯಮಗಳಿಗೆ ಸ್ಪಷ್ಟಣೆ ನೀಡಿದರು.

‘ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ.ಸುರೇಶ್ ಅವರನ್ನು ಎದುರಿಸುವ ಕುರಿತು ನಾಲ್ಕು ಗೋಡೆಗಳ ಮಧ್ಯೆ ಕೂತು ಕಾರ್ಯತಂತ್ರ ಮಾಡಲಾಗುವುದು. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಸಂಸದನೂ ಇರಬಾರದು. ದೇಶದ-ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್-ಬಿಜೆಪಿ ಮೈತ್ರಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಈ ವೇಳೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News