‘ಬ್ರ್ಯಾಂಡ್ ಬೆಂಗಳೂರು’ ಯೋಜನೆ ಜಾರಿ ವಿಳಂಬಕ್ಕೆ ಬಿಜೆಪಿ ಸದಸ್ಯರ ಆಕ್ಷೇಪ

Update: 2023-12-05 13:06 GMT

ಬೆಳಗಾವಿ, ಡಿ. 5: ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಸರಕಾರ ಅಭಿವೃದ್ದಿಯನ್ನು ಸಂಪೂರ್ಣ ಕಡೆಗಣಿಸಿ, ಕೇವಲ ಸಲಹೆ ಪಡೆದುಕೊಳ್ಳುವುದರಲ್ಲೇ ಸಮಯ ವ್ಯರ್ಥ ಮಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿಯ ಸದಸ್ಯರು, ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರದ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಎನ್.ಎ.ಹಾರಿಸ್ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ ಉತ್ತರಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯರು, ಅಭಿವೃದ್ಧಿಗೆ ಇನ್ನೂ ಎಷ್ಟು ದಿನಗಳ ಬೇಕು ಎಂದು ಮಾತಿನಲ್ಲೇ ತಿವಿದರು.

ಬಳಿಕ ಉತ್ತರಿಸಿದ ರಾಮಲಿಂಗಾರೆಡ್ಡಿ, ‘ಡಿ.ಕೆ.ಶಿವಕುಮಾರ್ ಅವರು ‘ಬ್ರ್ಯಾಂಡ್ ಬೆಂಗಳೂರು’ ಕಲ್ಪನೆಯನ್ನು ಸಾಕಾರಗೊಳಿಸಲು ಆಸಕ್ತಿ ತೋರಿಸಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿವೆ. ಅವುಗಳನ್ನು ಕ್ರೂಢೀಕರಿಸಲು 8 ಶೈಕ್ಷಣಿಕ ಸಂಸ್ಥೆಗಳನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪಿಸಿದ ಬಿಜೆಪಿಯ ಡಾ.ಅಶ್ವತ್ಥನಾರಾಯಣ, ವಿಪಕ್ಷ ನಾಯಕ ಆರ್.ಅಶೋಕ್, ಎಸ್.ಎಸ್. ವಿಶ್ವನಾಥ್, ಸತೀಶ್ ರೆಡ್ಡಿ, ಮುನಿರತ್ನ ಸಹಿತ ಮತ್ತಿತರರು ಸರಕಾರ ರಚನೆಯಾಗಿ ಆರು ತಿಂಗಳಾಗಿದೆ. ಇನ್ನೂ ಅಭಿವೃದ್ಧಿಗೆ ಸಲಹೆ ಪಡೆಯುವುದರಲ್ಲೇ ಕಾಲಾಹರಣ ಮಾಡಲಾಗುತ್ತಿದೆ. ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸಂಚಾರ ದಟ್ಟಣೆಯಲ್ಲಿ ಮೂರು ಗಂಟೆಗಳ ಕಾಲ ಒದ್ದಾಡಬೇಕಿದೆ. ಹೆಬ್ಬಾಳ ಮೇಲ್ಸೇತುವೆ ಯೋಜನೆಯನ್ನು ಪೂರ್ಣಗೊಳಿಸಲು ಇನ್ನೂ ಎಷ್ಟು ಸಮಯ ಬೇಕು ಎಂದು ವಿಪಕ್ಷ ನಾಯಕರು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸಚಿವರ ನೆರವಿಗೆ ಧಾವಿಸಿದ ಆಡಳಿತ ಪಕ್ಷದ ಸದಸ್ಯರಾದ ಎನ್.ಎ.ಹ್ಯಾರಿಸ್, ಎಚ್.ಸಿ.ಬಾಲಕೃಷ್ಣ, 9 ವರ್ಷಗಳ ಕಾಲ ಬಿಜೆಪಿ ಅಧಿಕಾರದಲ್ಲಿದೆ. ರಾಜ್ಯದಲ್ಲೂ ಬಿಜೆಪಿ ಸರಕಾರವು ಇತ್ತು. ಬೆಂಗಳೂರು ಅಭಿವೃದ್ಧಿಗೆ ನಿಮ್ಮ ಕೊಡುಗೆಗಳೇನು. ಸಮಸ್ಯೆಗಳ ಪರಿಹಾರಕ್ಕೆ ನಿಮ್ಮ ಸರಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು. ಇದರಿಂದ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ ಜೋರಾಗಿತ್ತು.

ಮೇಲ್ಸೇತುವೆ ಯೋಜನೆಗೆ ಬಿಜೆಪಿಯವರು ವಿರೋಧ ಮಾಡಿತ್ತು. ಈಗ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರದ ಸಮಸ್ಯೆಯಾಗುತ್ತಿದೆ ಎಂದು ಮಾತನಾಡುತ್ತಿದ್ದಾರೆಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.

ಬಳಿಕ ವಿವರಣೆ ನೀಡಿದ ರಾಮಲಿಂಗಾರೆಡ್ಡಿ, ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯ ಜಾರಿಗೆ ಉಪಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಸರಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಅಸ್ತಿತ್ವದಲ್ಲಿದೆ. ಅಲ್ಲದೆ, ತ್ವರಿತಗತಿಯಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗಳಿಗೆ ಸಲಹೆ-ಸೂಚನೆಗಳನ್ನು ಜಾರಿಗೊಳಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಉತ್ತರಿಸಿದರು.

......................

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News