ವಿಧಾನಸೌಧ, ವಿಕಾಸಸೌಧದಲ್ಲೂ ಆತ್ಯಾಚಾರ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆಯಿಂದ ಆರೋಪ

Update: 2024-09-26 15:33 GMT

ಮುನಿರತ್ನ

ಬೆಂಗಳೂರು : ಗುತ್ತಿಗೆದಾರನಿಗೆ ಲಂಚಕ್ಕೆ ಬೇಡಿಕೆ, ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಸೇರಿದಂತೆ ಸಾಲು ಸಾಲು ಪ್ರಕರಣಗಳಲ್ಲಿ ಸಿಲುಕಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದ್ದು, ವಿಧಾನಸೌಧ, ವಿಕಾಸಸೌಧ ಹಾಗೂ ಸರಕಾರಿ ವಾಹನದಲ್ಲೂ ಶಾಸಕ ಮುನಿರತ್ನ ಅತ್ಯಾಚಾರ ಎಸಗಿರುವುದಾಗಿ ಪೊಲೀಸರ ವಿಚಾರಣೆಯಲ್ಲಿ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿದ್ದಾರೆಂದು ವರದಿಯಾಗಿದೆ.

ಮುನಿರತ್ನ ಅತ್ಯಾಚಾರ ಪ್ರಕರಣ ಸಂಬಂಧ ಗುರುವಾರ ಪೊಲೀಸರು ಸಂತ್ರಸ್ತ ಮಹಿಳೆಯನ್ನು ವಿಚಾರಣೆ ನಡೆಸಿದ್ದು, ವಿಧಾನಸೌಧದೊಳಗೆ, ವಿಕಾಸಸೌಧದಲ್ಲಿ ಅಷ್ಟೇ ಅಲ್ಲದೆ, ಸರಕಾರಿ ವಾಹನದಲ್ಲೂ ಕೂಡ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿರುವುದಾಗಿ ಗೊತ್ತಾಗಿದೆ.

ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂತ್ರಸ್ತೆಯ ಅಚ್ಚರಿ ಹೇಳಿಕೆ ಮತ್ತಷ್ಟು ಸಂಕಷ್ಟ ತಂದೊಡ್ಡಿದಂತಾಗಿದೆ. ಅಲ್ಲದೆ, ರಾಜಕೀಯ ಹಾಗೂ ಸಾರ್ವಜನಿಕ ವಲಯವನ್ನು ಬೆಚ್ಚಿಬೀಳಿಸಿದೆ. ಈ ಕುರಿತು ಕಗ್ಗಲಿಪುರ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News