ಯತ್ನಾಳ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ಬಿಜೆಪಿ ದುರ್ಬಲವಾಗಿದೆ: ಸಚಿವ ಎಂ.ಬಿ.ಪಾಟೀಲ್

Update: 2023-12-29 13:35 GMT

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ವಿರುದ್ಧವೆ ಭ್ರಷ್ಟಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೆಳಿದಾದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದರು.

ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ ಬಿಜೆಪಿ ಸರಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದು ಅವರು ಹೇಳಿದರು.

ಬಿಜೆಪಿ ಸರಕಾರವಿದ್ದಾಗ ಕೊರೋನ ಸಂದರ್ಭದಲ್ಲಿ ನಡೆದ ಖರೀದಿ ಮತ್ತಿತರ ವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಸರಕಾರ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸ ಮಾಡುತ್ತದೆ. ಯಾರಿಂದಲಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

ಅಂಗಡಿ ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಕನ್ನಡ ನಾಮಫಲಕ ಬಳಸಬೇಕೆಂದು ಕರವೇ ಕಾರ್ಯಕರ್ತರು ಹೋರಾಟ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಯಮದ ಪ್ರಕಾರ ಕನ್ನಡ ಬಳಸಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ. ಆದರೆ, ಯಾರೂ ಏಕಾಏಕಿ ಕಾನೂನನ್ನು ತಮ್ಮ ಕೈಗೆ ಎತ್ತಿಕೊಳ್ಳಬಾರದು ಎಂದರು.

ಮೊದಲಿಗೆ, ಕನ್ನಡ ನಾಮಫಲಕಗಳನ್ನು ಹಾಕಲು ಒಂದು ಗಡುವು ನಿಗದಿಪಡಿಸುವ ನಿರ್ಧಾರ ಆಗಲಿ. ಅದಾದ ಮೇಲೆ ನಿಯಮ ಪಾಲಿಸದವರ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಉದ್ಯಮಗಳ ಸ್ಥಾಪನೆಗೆ ಭಾರತದ ರಾಜ್ಯಗಳೂ ಸೇರಿದಂತೆ ಜಗತ್ತಿನೆಲ್ಲೆಡೆ ಪೈಪೋಟಿ ಇದೆ. ಉದ್ಯಮಿಗಳಿಗೆ ಯಾವುದೇ ರಾಜ್ಯವೂ ಅನಿವಾರ್ಯವಲ್ಲ. ಇಂತಹ ಘಟನೆಗಳು ನಡೆದಾಗ ಅವು ಎಲ್ಲಾ ಕಡೆ ವೈರಲ್ ಆಗಿ ನಮ್ಮಲ್ಲಿ ಬಂಡವಾಳ ಹೂಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಕನ್ನಡಪರ ಹೋರಾಟಗಾರರು ಇದರ ಬಗ್ಗೆಯೂ ಗಮನಹರಿಸಬೇಕು ಎಂದು ಅವರು ಹೇಳಿದರು.

ನಮ್ಮ ಇಲಾಖೆಗೆ ಒಳಪಟ್ಟ ವ್ಯಾಪ್ತಿಯಲ್ಲಿ ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸಲಹಾಸೂಚಿ (ಅಡೈಸರಿ) ಹೊರಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಕಾಂಗ್ರೆಸ್ ಸರಕಾರದಲ್ಲಿ ಮೂವರು ಡಿಸಿಎಂ ಗಳನ್ನು ಮಾಡುವ ಸಾಧ್ಯತೆ ಬಗ್ಗೆ ಕೇಳಿದಾಗ, ಇದರ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಾಯಕರ ಮುಂದೆ ನಮ್ಮ ಅಭಿಪ್ರಾಯ ಹೇಳುತ್ತೇವೆ. ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಅಗತ್ಯವಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News