ಸಚಿವ ಸಂಪುಟ ಸಭೆ | ರಾಜ್ಯದಲ್ಲಿ 100 ಗ್ರಾಮ ಕೋರ್ಟ್‌ ಸ್ಥಾಪನೆ; ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗಲಿದೆ ʼಗೃಹಲಕ್ಷ್ಮಿʼ ಹಣ

Update: 2023-10-19 15:32 GMT

ಬೆಂಗಳೂರು: 2008-09ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರವು ‘ಗ್ರಾಮ ನ್ಯಾಯಾಲಯ’ಗಳನ್ನು ಸ್ಥಾಪಿಸುವ ಸಂಬಂಧ ಕಾನೂನು ಜಾರಿಗೆ ತಂದಿತ್ತು. ಅದರಂತೆ, ರಾಜ್ಯದಲ್ಲಿ 25 ಕೋಟಿ ರೂ.ವೆಚ್ಚದಲ್ಲಿ 100 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 

ʼʼಗ್ರಾಮೀಣ ಪ್ರದೇಶದ ಜನರ ಮನೆಯ ಬಾಗಿಲಿಗೆ ನ್ಯಾಯದಾನ ಸಿಗಬೇಕು. ಗ್ರಾಮೀಣ ಜನರು ನ್ಯಾಯಕ್ಕಾಗಿ ಪಟ್ಟಣ, ನಗರ ಪ್ರದೇಶಗಳಿಗೆ ಅನಗತ್ಯವಾಗಿ ಅಲೆದಾಡಬಾರದು ಎಂಬ ಉದ್ದೇಶದಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಇವು ಜೆಎಂಎಫ್‍ಸಿ ಹಂತದ ನ್ಯಾಯಾಲಯಗಳ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿವೆʼʼ ಎಂದು ಅವರು ಹೇಳಿದರು.

ಕೇಂದ್ರ ಸರಕಾರವು ಈ ಯೋಜನೆ ಅನುಷ್ಠಾನಕ್ಕಾಗಿ ಒಂದು ಬಾರಿಗೆ ಅನ್ವಯಿಸುವಂತೆ ಒಂದು ಗ್ರಾಮ ನ್ಯಾಯಾಲಯಕ್ಕೆ 18 ಲಕ್ಷ ರೂ.ಗಳನ್ನು ನೀಡಲಿದೆ. ಈ ಗ್ರಾಮ ನ್ಯಾಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗಲಿದೆ ʼಗೃಹಲಕ್ಷ್ಮಿʼಹಣ

ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡುವುದು ಹಾಗೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಹಣ ನೀಡುವ ವ್ಯವಸ್ಥೆಯನ್ನೆ ಮುಂದುವರೆಸಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಅವರು ತಿಳಿಸಿದರು. 


110 ಮಲ ತ್ಯಾಜ್ಯ ಸಂಸ್ಕರಣಾ ಸ್ಥಾವರಗಳ ನಿರ್ಮಾಣ: 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಯಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎನ್‍ಜಿಟಿ ಪರಿಸರ ಪರಿಹಾರ ನಿಧಿಯಡಿ 400.24 ಕೋಟಿ ರೂ.ವೆಚ್ಚದಲ್ಲಿ ಒಟ್ಟು 110 ಮಲ ತ್ಯಾಜ್ಯ ಸಂಸ್ಕರಣಾ ಸ್ಥಾವರಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸೆಪ್ಟಿಕ್ ಟ್ಯಾಂಕ್‍ಗಳಿಂದ ಎಫ್‍ಎಸ್‍ಟಿಪಿ ಘಟಕಗಳಿಗೆ ಮಲದ ಕೆಸರನ್ನು ಸಾಗಿಸಲು ಕೆಯುಐಡಿಎಫ್‍ಸಿ ವತಿಯಿಂದ ಎಸ್‍ಬಿಎಂ ನಿಧಿ ಅಡಿಯಲ್ಲಿ 40.25 ಕೋಟಿ ರೂ.ವೆಚ್ಚದಲ್ಲಿ 161 ಸೆಸ್‍ಪೂಲ್ ವಾಹನಗಳನ್ನು ಖರೀದಿಸಲು ಅನುಮೋದಿಸಲಾಗಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News