ಚಿಕ್ಕಮಗಳೂರು: ಮನೆಯ ಅಂಗಳಕ್ಕೆ ಉರುಳಿ ಬಿದ್ದ ಕಾರು; 9 ಮಂದಿಗೆ ಗಂಭೀರ ಗಾಯ

Update: 2023-07-30 16:36 GMT

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಯ ಅಂಗಳಕ್ಕೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಕೋಲಾರ ಮೂಲದ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಳಸ ಪಟ್ಟಣ ಸಮೀಪದ ಕಲ್ಮಕ್ಕಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

ಕೋಲಾರ ನಗರದಿಂದ ಇನೋವಾ ಕಾರಿನಲ್ಲಿ ಹೊರನಾಡು ದೇವಾಲಯಕ್ಕೆ ಆಗಮಿಸುತ್ತಿದ್ದ ವೇಳೆ ಕಳಸ ಪಟ್ಟಣ ಸಮೀಪದ ಕಲ್ಮಕ್ಕಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ 9 ಮಂದಿಯೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು, ಪೊಲೀಸರು ಕಾರಿನಲ್ಲಿದ್ದವರನ್ನು ಕಳಸ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣಕ್ಕೆ ಎಲ್ಲರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಾರು ಹೊಂಡದಲ್ಲಿದ್ದ ಮನೆಯ ಸಮೀಪಕ್ಕೆ ಬಿದ್ದಿದ್ದು, ಮನೆಯ ಮೇಲೆ ಉರುಳಿ ಬಿದ್ದಿದ್ದರೇ ಭಾರೀ ಅನಾಹುತ ಸಂಭವಿಸುತ್ತಿತ್ತು. ಕೂದಲೆಳೆ ಅಂತರದಿಂದ ಮನೆಯ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News