ಜಾತಿಗಣತಿ ವರದಿ | ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ : ಸಿಎಂ ಸಿದ್ದರಾಮಯ್ಯ

Update: 2024-10-07 11:47 GMT

ಸಿಎಂಗೆ ಮನವಿ ಸಲ್ಲಿಸಿದ ಶಾಸಕರು

ಬೆಂಗಳೂರು : "ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅ.18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ 30 ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕರಿಸಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆʼ ಎಂದು ತಿಳಿಸಿದರು.

ʼಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆ ಮನೆಗೆ ಭೇಟಿ ನೀಡಿ, ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರಕಾರ ಬಂದರೂ , ವರದಿಯನ್ನು ಸ್ವೀಕರಿಸಲಿಲ್ಲʼ ಎಂದರು.

ʼನಂತರ ಕಾಂತರಾಜು ಅಧ್ಯಕ್ಷರ ಅವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗಡೆ ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ, ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆʼ ಎಂದು ವಿವರಿಸಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅ.18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News