ಕಾವೇರಿ ಬಿಕ್ಕಟ್ಟು | ಕೇಂದ್ರ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದ ಪ್ರಹ್ಲಾದ್ ಜೋಶಿ

Update: 2023-09-23 17:31 GMT

ಹುಬ್ಬಳ್ಳಿ, ಸೆ.23: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಬಗೆಹರಿಸಲು ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಎದುರು ನಮ್ಮ ರಾಜ್ಯದಲ್ಲಿನ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಹಾಗೂ ತಮಿಳುನಾಡಿನಲ್ಲಿರುವ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ವಸ್ತುಸ್ಥಿತಿ ಅವಲೋಕಿಸುವಂತೆ ರಾಜ್ಯ ಸರಕಾರ ಸಮರ್ಪಕವಾಗಿ ವಾದ ಮಾಡದೆ ಇರುವುದರಿಂದ ನಮಗೆ ಹಿನ್ನಡೆಯಾಗಿದೆ ಎಂದು ದೂರಿದರು.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬೇಕಿರುವ ಎಲ್ಲ ಸಹಕಾರವನ್ನು ನೀಡುತ್ತಿದ್ದೇವೆ. ಆದರೆ, ಈ ವಿಚಾರ ಈಗ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಮಾತನಾಡಲು ಆಗಲ್ಲ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದಾಗ ಈ ಎಲ್ಲ ಸಂಗತಿಗಳನ್ನು ಅವರಿಗೆ ವಿವರಿಸಿದ್ದೇನೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News