ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ | ಇನ್ನು ಮುಂದೆ SSLC, PUC ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ

Update: 2023-09-06 03:54 GMT

ಬೆಂಗಳೂರು, ಸೆ.5: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತಂದಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಪೂರಕ ಪರೀಕ್ಷೆ ನಡೆಸುವುದಿಲ್ಲ. ಬದಲಾಗಿ ವಾರ್ಷಿಕ ಪರೀಕ್ಷೆಗಳನ್ನೇ ಮೂರು ಬಾರಿ ಪರೀಕ್ಷೆ ನಡೆಸಲಾಗುವುದು.

ಈ ಬದಲಾವಣೆಗಳನ್ನು 2023-24ನೆ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ತರಲಾಗುತ್ತಿದ್ದು, ಎರಡೂ ತರಗತಿಗಳ ಪೂರಕ ಪರೀಕ್ಷೆ ಎಂಬುದರ ಬದಲಾಗಿ ವಾರ್ಷಿಕ ಪರೀಕ್ಷೆ 1, 2 ಮತ್ತು 3ನೆ ಹಂತದ ನಡೆಲಾಗುತ್ತದೆ.

ವೇಳಾಪಟ್ಟಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ-1ನ್ನು ಮಾ.1 ರಿಂದ ಮಾ.25ರವರೆಗೆ ನಡೆಸಿ ಎ.22ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಪರೀಕ್ಷೆ 2ನ್ನು ಮೇ 15 ರಿಂದ ಜೂ.5 ರವರೆಗೆ ನಡೆಸಿ, ಜೂ.21ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಪರೀಕ್ಷೆ-3ರನ್ನು ಜು.12 ರಿಂದ ಜು.30ರವರೆಗೆ ನಡೆಸಿ, ಆ.25ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಾ.30 ರಿಂದ ಎ.15ರವರೆಗೆ ಪರೀಕ್ಷೆ 1 ನಡೆಸಿ, ಮೇ 8ರನ್ನು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಪರೀಕ್ಷೆ-2ನ್ನು ಜೂ.12 ರಿಂದ ಜೂ.19ರವರೆಗೆ ನಡೆಸಿ, ಜೂ.29ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ನಡುವೆ ಪರೀಕ್ಷೆ-3ನ್ನು ಜು.29 ರಿಂದ ಆ.5ರವರೆಗೆ ನಡೆಸಿ ಆ.19ರಂದು ಫಲಿತಾಂಶ ಪ್ರಕಟವಾಗಲಿದೆ.

ಈಗಿರುವ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಉಂಟು ಮಾಡುತ್ತದೆ. ಇದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ ಎಂದು ಮಂಡಳಿಯು ತಿಳಿಸಿದೆ.

ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿಯ ಅಂತಿಮ ಅಂಕಗಳೆಂದು ಈಗ ಪರಿಗಣಿಸಲಾಗುತ್ತಿದೆ. ಆದರೆ ಇದು ವಿದ್ಯಾರ್ಥಿ ಸ್ನೇಹಿಯಾಗಿರುವುದಿಲ್ಲ. ಹಾಗಾಗಿ ಬದಲಾವಣೆಯನ್ನು ತರಲಾಗಿದೆ ಎಂದು ಮಂಡಳಿಯು ಸ್ಪಷ್ಟಪಡಿಸಿದೆ.

ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ ವಾರ್ಷಿಕ ಪರೀಕ್ಷೆ-1, 2, ಮತ್ತು 3ರಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಿದಂತಾಗುತ್ತದೆ. ಅಂದರೆ ಮೂರು ಪ್ರಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಇದು ಮುಂದಿನ ವ್ಯಾಸಂಗಕ್ಕೆ ಅಥವಾ ಉದ್ಯೋಗಕ್ಕೆ ಆಯ್ಕೆ ಪ್ರಕ್ರಿಯೆಗಳಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿದಂತಾಗುತ್ತದೆ ಎಂದು ಮಂಡಳಿಯು ಅಭಿಪ್ರಾಯಪಟ್ಟಿದೆ.

ವಿದ್ಯಾರ್ಥಿಗಳ ಕಲಿಕೆಯ ವೇಗ ಮತ್ತು ಶೈಲಿಯು ವಿಭಿನ್ನವಾಗಿದ್ದು, 1, 2, ಮತ್ತು 3 ಪರೀಕ್ಷೆಗಳನ್ನು ನಡೆಸುವುದರಿಂದ ಅವರ ಕಲಿಕೆಯ ವೇಗಕ್ಕೆ ಹೊಂದಿಕೊಳ್ಳಲು ಮತ್ತು ಸಮಯದ ನಿಬರ್ಂಧಗಳಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು ಎಂದು ತಿಳಿಸಿದೆ.

ಇನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಡವಾಗಿ ದಾಖಲಾಗುವ ಪ್ರಥಮ ಪಿಯುಸಿ ಅಥವಾ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಂಡಳಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News