ಚನ್ನಪಟ್ಟಣ ಉಪಚುನಾವಣೆ | ಬಿಜೆಪಿ ಜತೆ ಚರ್ಚಿಸಿ ವಾರದಲ್ಲಿ ಟಿಕೆಟ್ ಅಂತಿಮ : ಕುಮಾರಸ್ವಾಮಿ

Update: 2024-10-12 12:13 GMT

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಮಿತ್ರಪಕ್ಷ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಿ ಒಂದು ವಾರದಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ ಅವರು, ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್-ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕೆಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು

ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪಚುನಾವಣೆ ನಡೆಯಬಹುದು. ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದಿಲ್ಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ಕೂತು ಚರ್ಚೆ ಮಾಡುತ್ತೇವೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಎರಡು ಬಾರಿ ಜೆಡಿಎಸ್‍ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ ಎಂದು ಅವರು ಹೇಳಿದರು.

ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು. 2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಅವರು ಹೇಳಿದರು.

ನಿಖಿಲ್ ಅಭ್ಯರ್ಥಿ ಆಗಬೇಕೆಂಬ ಒತ್ತಡವಿದೆ:

ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯ ಅಭ್ಯರ್ಥಿ ಆಗಬೇಕೆಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇರುವುದು ನಿಜ. ನಿಖಿಲ್ ನಿಲ್ಲಬೇಕೆಂದು ಶೇ.95ರಷ್ಟು ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು.

ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲ ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್‍ಡಿಎ ಭಾಗ. ಎನ್‍ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್‍ಡಿಎ ಗೆಲುವು, ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ಮೋದಿ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ ಎಂದು ಅವರು ಹೇಳಿದರು

ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ ನಾಲ್ಕೈದು ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಫಲ ಸಿಗಲ್ಲ:

ಚನ್ನಪಟ್ಟಣಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ, ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ ಅವರು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News