ಮೈಸೂರು ಚಿತ್ರನಗರಿ ನಿರ್ಮಾಣಕ್ಕೆ 110 ಎಕರೆ ಭೂಮಿ ಹಸ್ತಾಂತರಿಸಲು ಸಿಎಂ ಆದೇಶ

Update: 2024-09-18 14:47 GMT

ಬೆಂಗಳೂರು : ಮೈಸೂರಿನ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸಲು ಗುರುತಿಸಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಹಸ್ತಾಂತರಿಸುವಂತೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು ಫಿಲ್ಮ್ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಚಿತ್ರನಗರಿ ನಿರ್ಮಾಣಕ್ಕೆ ಈಗಾಗಲೇ ಗುರುತಿಸಿರುವ 110 ಎಕರೆ ಭೂಮಿ ಜೊತೆಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ತಿಳಿಸಿದರು.

ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯಿರಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು.

ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ತಿಳಿಸಿದರು.

ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಬೇಕು. ಚಿತ್ರನಗರಿಯಲ್ಲಿ ಥಿಯೇಟರ್, ಸ್ಟುಡಿಯೋ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್, ಹೋಟೆಲ್‍ಗಳ ನಿರ್ಮಾಣವಾಗಲಿ. ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕು. ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News