ಬಿಜೆಪಿ ತನ್ನ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ : ಸಿಎಂ ಸಿದ್ದರಾಮಯ್ಯ

Update: 2024-05-27 10:33 GMT

Photo : x/@siddaramaiah

ಬೆಂಗಳೂರು : ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ತನ್ನ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

"ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ" ಎಂದು ವ್ಯಂಗ್ಯವಾಡಿದರು.

ʼಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರು, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು , ದೇಶದ ಕೈಗಾರಿಕೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆʼ ಎಂದರು.

ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು :

ʼಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರು. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.

ನೆಹರು ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರು ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ , ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ವಿವರಿಸಿದರು.

ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News