ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಇತಿಹಾಸವನ್ನು ಅವಲೋಕಿಸಿದರೆ, ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದವೇ ಮಾಡಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು. ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಚುನಾವಣೆಯನ್ನು ಎದುರಿಸಿದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಬಾರಿಗಿಂತ ಕಡಿಮೆ ಸ್ಥಾನವನ್ನು ಪಡೆದಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿಯವರು 2008 ರಿಂದ 2013, 2019 ರಿಂದ 2023ರವರೆಗೆ ಅಧಿಕಾರ ನಡೆಸಿದ್ದಾರೆ. ಆದರೆ ಬಿಜೆಪಿಯವರು ಒಮ್ಮೆಯೂ ಬಹುಮತ ಪಡೆಯದೇ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಅವರು ತಿಳಿಸಿದರು.
ಬಿಜೆಪಿಯವರು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಶೇ.10ರಷ್ಟು ಈಡೇರಿಸಲು ಸಾಧ್ಯವಾಗಲಿಲ್ಲ. ಇದೇ ಸದನದಲ್ಲಿ ಯಡಿಯೂರಪ್ಪನವರು ಭರವಸೆಗಳನ್ನು ಈಡೇರಿಸಲು, ಸಾಲ ಮನ್ನಾ ಮಾಡಲು ನಾವು ನೋಟ್ ಪ್ರಿಂಟ್ ಮೆಷಿನ್ ಇಟ್ಟಿಲ್ಲ ಎಂದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.