ಭಾಷೆಯ ವಿಚಾರಕ್ಕೆ ವಿನಾಕರಣ ಹಲ್ಲೆ ಮಾಡುವ, ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ : ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು : ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡಿಗ ವಿಕಾಸ್ ಕುಮಾರ್ ಮೇಲೆ ವಿಂಗ್ ಕಮಾಂಡರ್ ಅಧಿಕಾರಿಯಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ. ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ…
— CM of Karnataka (@CMofKarnataka) April 22, 2025