ಪಾಕಿಸ್ತಾನದ ವಿರುದ್ಧ ಕೇಂದ್ರ ತೆಗೆದುಕೊಂಡಿರುವ ತೀರ್ಮಾನಗಳಿಗೆ ಬದ್ಧ: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣವು ಮುಖ್ಯ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ತೀರ್ಮಾನ ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಕೇಂದ್ರ ಸರಕಾರ ತೆಗೆದುಕೊಳ್ಳುವ ತೀರ್ಮಾನಗಳಿಗೆ ನಾವು ಬದ್ಧ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ರವಿವಾರ ಇಲ್ಲಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಭಾರತ ಉಳಿಯಬೇಕು ಎನ್ನುವುದು ನಮ್ಮ ನಿಲುವು. ಹೀಗಾಗಿ ಕೇಂದ್ರ ಸರಕಾರ ಕೈಗೊಳ್ಳುವ ತೀರ್ಮಾನಕ್ಕೆ ನಮ್ಮ ಪಕ್ಷ ಬದ್ಧ ಎಂದು ಪ್ರಕಟಿಸಲಾಗಿದೆ ಎಂದರು.
ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿಯವರು ಇರಬೇಕಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಅವರೇ ಉತ್ತರ ಕೊಡಬೇಕು. ಮಾಧ್ಯಮಗಳು ಈ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರ ನೀಡಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಶಿವಕುಮಾರ್ ತಿಳಿಸಿದರು.