ಬಿಎಸ್‍ವೈ ಕೇಸ್‌ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ

Update: 2024-06-14 11:12 GMT

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ʼಆ ಥರ ಏನೂ ನಡೆದಿಲ್ಲʼ ಎಂದು ಪೊಲೀಸರು ತಿಳಿಸಿ, ಬಿ.ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸ್‌ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ರಾಜಕೀಯ ಕಾರಣಕ್ಕೆ ಈ ಕೇಸನ್ನು ಬಳಸುವ ಅನುಮಾನ ವ್ಯಕ್ತವಾಗಿದೆ. ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು?. ದೂರುದಾರೆಯು ಈ ತರಹದ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಮಾನ್ಯ ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಗಮನ ಸೆಳೆದರು. ‘ಮಾನಸಿಕವಾಗಿ ಸ್ವಲ್ಪ..’ ಎಂದು ಹೇಳಿಕೆ ನೀಡಿದ್ದರು ಎಂದರು.

ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ದೂರಿಗೆ ಸಂಬಂಧಿಸಿ ಸರಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮಾರ್ಚ್ 14ರಂದು ಅವರ ಮೇಲೆ ದೂರು ದಾಖಲಾಗಿತ್ತು. ಫೆಬ್ರವರಿ 2ರಂದು ಈ ಪ್ರಕರಣ ನಡೆದ್ದಾಗಿ ಆರೋಪಿಸಲಾಗಿದೆ. ಯಡಿಯೂರಪ್ಪ ಅವರು ಸಿಐಡಿ ಮುಂದೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು ಎಂದು ತಿಳಿಸಿದರು.

ಇದೀಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಇವತ್ತು ಹೈಕೋರ್ಟ್ ಮುಂದೆ ಮೊಕದ್ದಮೆ ಬರಲಿದ್ದು, ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಯಡಿಯೂರಪ್ಪ ಅವರ ಮೇಲಿನ ಮೊಕದ್ದಮೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರವು ರಾಜಕೀಯದ ದೃಷ್ಟಿಯಿಂದ ನೋಡುತ್ತಿದೆ ಎಂದು ಆರೋಪಿಸಿದರು.

ಸರಕಾರದ ನಿಲುವು ಬದಲಾಗಲು ಕಾರಣ ಏನು?:

ಗೃಹ ಸಚಿವರ ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಬಹಳಷ್ಟು ವ್ಯತ್ಯಾಸ ಇದೆ. ಅವತ್ತು ಅವರು ದೂರುದಾರರ ವ್ಯಕ್ತಿತ್ವವನ್ನೇ ಅನಾವರಣಗೊಳಿಸಿದ್ದರು. ಇವತ್ತು ಅವರು, ಅಗತ್ಯ ಇದ್ದರೆ ಬಂಧಿಸುತ್ತೇವೆ ಎಂದಿದ್ದಾರೆ. ಸರಕಾರದ ನಿಲುವು ಬದಲಾಗಲು ಕಾರಣ ಏನು?. ಲೋಕಸಭಾ ಚುನಾವಣೆಯ ಸೋಲು ಕಾರಣವೇ?. ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲೇ ಸೋತಿದ್ದು ಒಂದು ಕಾರಣ ಇರಬಹುದೇ?. ಉಪ ಮುಖ್ಯಮಂತ್ರಿಯವರ ಸೋದರನ ಸೋಲಿನ ಆಘಾತ ಈ ರೀತಿ ನಿಲುವು ಬದಲಾಗಲು ಕಾರಣವೇ? ಎಂದು ಸಿ.ಟಿ.ರವಿ ಅವರು ಪ್ರಶ್ನಿಸಿದರು.

ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಅವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News