ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ : ಒಂದು ವಾರದವರೆಗೆ ಎಚ್ಚರಿಕೆ ವಹಿಸಲು ಹವಮಾನ ಇಲಾಖೆ ಸೂಚನೆ

Update: 2024-04-03 15:40 GMT

ಬೆಂಗಳೂರು: ಎಪ್ರಿಲ್ ಮೊದಲ ಮತ್ತು ಎರಡನೆಯ ವಾರದಲ್ಲಿ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ ಇರಲಿದ್ದು, ಇನ್ನೂ ಒಂದು ವಾರಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯಿಂದ ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಿದೆ. ಗರಿಷ್ಠ ತಾಪಮಾನ ಮಾತ್ರ ಅಲ್ಲದೇ ಕನಿಷ್ಠ ತಾಪಮಾನದಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಬುಧವಾರದಂದು 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇಂದು (ಎ.4) 38 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಬರಗಾಲ, ಜಲಕ್ಷಾಮಕ್ಕೆ ಸಿಲುಕಿ ತತ್ತರಿಸುತ್ತಿರುವ ನಗರಕ್ಕೆ ಇದರಿಂದ ಮತ್ತೊಂದು ಆಘಾತ ಎದುರಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ.

ಆರೋಗ್ಯ ಸಲಹೆ: ರಕ್ತದೊತ್ತಡ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡಬಾರದು. ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಆಗುವ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರಲಿದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News