ಕಸ್ತೂರಿ ರಂಗನ್ ಸಮಿತಿ ವರದಿ : ಪಶ್ಚಿಮಘಟ್ಟದ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ

Update: 2024-08-28 15:44 GMT

ಬೆಂಗಳೂರು : ಇತ್ತೀಚಿಗೆ ಕೇಂದ್ರ ಸರಕಾರ ಪಶ್ಚಿಮ ಘಟ್ಟ ಪ್ರದೇಶಕ್ಕೆ ಹೊರಡಿಸಿರುವ 6ನೆ ಅಧಿಸೂಚನೆ (ಕಸ್ತೂರಿ ರಂಗನ್ ಸಮಿತಿ ವರದಿ)ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸಂಪುಟದಲ್ಲಿ ಅಭಿಪ್ರಾಯ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಮಾಂಕಾಳ್ ವೈದ್ಯ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಕುರಿತಂತೆ ಕೇಂದ್ರದ ಅಧಿಸೂಚನೆ ಒಪ್ಪಿಕೊಂಡರೆ ಪಶ್ಚಿಮಘಟ್ಟದ ಜನರ ಬದುಕಿನ ಮೇಲೆ ಆಗಬಹುದಾದ ಪರಿಣಾಮ, ಸಾಧಕ ಬಾಧಕಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ.

ಆದರೆ ಈಗಾಗಲೇ ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶದಲ್ಲಿ 16632 ಚದರ ಕಿ.ಮೀ.ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದುಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇಎಸ್‍ಝಡ್) ಎಂದು ಘೋಷಿಸಿದ್ದು, ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿರುತ್ತದೆ. ಹೀಗಾಗಿ ಇದಕ್ಕಷ್ಟೇ ಸೀಮಿತಗೊಳಿಸಿ ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಕೇಂದ್ರ ಹೊರಡಿಸಿರುವ 6ನೆ ಅಧಿಸೂಚನೆಗೆ ಸರಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು ಎಂದು ಹೇಳಿದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶಗಳಿದ್ದು, ಇಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ನಿಲುವು ತಿಳಿಸಬೇಕಾಗುತ್ತದೆ. ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಂತರ ಪಶ್ಚಿಮಘಟ್ಟದ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಚಿವ ಸಂಪುಟಕ್ಕೆ ಅಂತಿಮ ಶಿಫಾರಸು ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News